•  

ಪೂರ್ಣಚಂದ್ರ ತೇಜಸ್ವಿ ಇಲ್ಲದ ಎರಡು ವರ್ಷ!

ಸೋಮವಾರ, ಏಪ್ರಿಲ್ 6, 2009, 12:16 [IST]
Never forgettable KP Poornachandra tejaswi
ನೆನಪಿಸಿಕೊಂಡಷ್ಟೂ ನೆನಪಾಗುತ್ತಲೇ ಇರುವ ಮಹಾಚೇತನ ತೇಜಸ್ವಿ. ಅವರ ಕಾಲದಲ್ಲಿ ನಾವಿದ್ದೆವಲ್ಲ ಎಂದುಕೊಂಡಾಗ ಖುಷಿಯಾಗುತ್ತದೆ, ಹೆಮ್ಮೆಯಾಗುತ್ತದೆ. ಅವರು ಜತೆಗಿಲ್ಲ ಅನಿಸಿದಾಗ ಮಾತ್ರ- ಮನೆಯ ಹಿರಿಯನೊಬ್ಬ ಒಂದು ಮಾತೂ ಹೇಳದೆ ಹೋಗಿಬಿಟ್ಟಾಗ ಆಗುತ್ತದಲ್ಲ- ಅಂಥ ಸಂಕಟವಾಗುತ್ತದೆ ಮತ್ತು ಈ ಸಂಕಟ ಜತೆಗೇ ಇರುತ್ತದೆ- ನಾವಿರುವ ತನಕ!

* ಎಆರ್ ಮಣಿಕಾಂತ್

ಎರಡು ವರ್ಷ ಕಳೆದೇ ಹೋಯ್ತು ನಿಜ. ಆದರೆ, `ಅವರು ನಮ್ಮೊಂದಿಗಿಲ್ಲ' ಎನ್ನಲು ಈಗಲೂ ಮನಸ್ಸು ಒಪ್ಪುವುದಿಲ್ಲ. ಏಕೆಂದರೆ- `ಏರೋಪ್ಲೇನ್ ಚಿಟ್ಟೆಯನ್ನು ನೋಡಿದಾಗಲೆಲ್ಲ ಅವರು ನೆನಪಿಗೆ ಬರುತ್ತಾರೆ. `ಹಾರುವ ಏತಿ' ಅಂದಾಕ್ಷಣ ಅವರ ಬರಹವೆಂಬ ಬೆರಗು ಜತೆಯಾಗುತ್ತದೆ. ಮರಿಗಳಿಗೆ ಗುಟುಕು ತಿನ್ನಿಸುತ್ತಿರುವ ಸೂರಕ್ಕಿಯ, ಭತ್ತದ ತೆನೆಗೆ ಬಾಯಿ ಹಾಕಿರುವ ಗುಬ್ಬಿಮರಿಯ, ಬಣ್ಣ ಬದಲಿಸುತ್ತಿರುವ ಕೀಟದ, ಹಸಿರು ಎಲೆಯಂತೆಯೇ ಭಾಸವಾಗುವ ಪತಂಗದ, ಬಾಗಿಲ ಮರೆಯಲ್ಲಿ ನಿಂತು ಕಣ್ಣು ಹೊಡೆಯುತ್ತಿರುವ ಬೆಡಗಿಯಂತೆ ಪೋಸ್ ಕೊಟ್ಟಿರುವ ಮರಕುಟಿಕದ ಫೋಟೊ ಕಂಡಾಗಲೆಲ್ಲ- `ಅರೆ, ಇಲ್ಲೇ ಇದ್ದಾರಲ್ಲ ತೇಜಸ್ವಿ?' ಅನ್ನಿಸಿಬಿಡುತ್ತದೆ. ಮನೆಯ ವರಾಂಡದಲ್ಲಿರುವ ಪುಟ್ಟ ಗೋಡೆಯ ಮೇಲೆ ಒಂದು ಕಾಲಿಟ್ಟುಕೊಂಡು ಆಟೊಗ್ರಾಫ್ ಹಾಕುತ್ತಿರುವ ಅವರ ಫೋಟೊ ನೋಡಿದಾಗಲಂತೂ, ತಡವರಿಸುತ್ತಲೇ- `ನಮಸ್ಕಾರ ಸಾರ್' ಎಂದು ಬಿಡುವ ಮನಸ್ಸಾಗುತ್ತದೆ. ಹೀಗೆ- `ನಮಸ್ಕಾರ' ಅನ್ನುತ್ತಲೇ ಡಿಸ್ಟರ್ಬ್ ಮಾಡುತ್ತಿದ್ದವರಿಗೆ ಅವರು- `ಶನಿ ಮುಂಡೇವಾ, ಶುರುವಾಯ್ತಾ ನಿಮ್ಮ ಕಾಟ?' ಎಂದು ಪ್ರೀತಿಯಿಂದಲೇ ಗದರಿಸುತ್ತಿದ್ದರಲ್ಲ ಎಂಬುದು ನೆನಪಾದಾಗ ಖುಷಿಯಾಗುತ್ತದೆ.

ಒಂದು ಚಿತ್ರವಾಗಿ, ಒಂದು ಪಾತ್ರವಾಗಿ, ಬದುಕಿನ ಆದರ್ಶವಾಗಿ, ಕಂದನ ಮುಗುಳ್ನಗೆಯಾಗಿ, ಅಮ್ಮನ ಮಮತೆಯಾಗಿ, ಹಿರಿಯಣ್ಣನ ಗದರಿಕೆಯಾಗಿ ಮತ್ತು ತಮಾಷೆ ಅನ್ನಿಸುವಂಥ ಬೈಗುಳದ ನೆಪವಾಗಿ ಎಲ್ಲರನ್ನೂ ಪದೇ ಪದೆ ಕಾಡುತ್ತಿದ್ದಾರೆ ತೇಜಸ್ವಿ. ಈಗ್ಗೆ ಎರಡು ವರ್ಷದ ಹಿಂದೆ ಅಂದರೆ 2007, ಏಪ್ರಿಲ್ 5ರ ಗುರುವಾರ ಮಧ್ಯಾಹ್ನ ಊಟ ಮುಗಿಸಿದ ಕೆಲವೇ ನಿಮಿಷಗಳ ನಂತರ; `ಒಂದು ಗಂಟೆ ನಲವತ್ತಾರು ನಿಮಿಷಕ್ಕೆ ಕುಸಿದು ಬಿದ್ದು, ಹೃದಯಾಘಾತದಿಂದ- ತೇಜಸ್ವಿ ತೀರಿಕೊಂಡರು' ಎಂಬ ಸುದ್ದಿ ಕೇಳಿದ ಅಭಿಮಾನಿಗಳೆಲ್ಲ- ಛೆ ಛೆ, ಬಿಡ್ತು ಅನ್ರಿ, ತೇಜಸ್ವಿ ಅವರಿಗೆ ಅಂಥದೇನೂ ಆಗಿಲ್ಲ ಅಂತ ಹೇಳ್ರಿ. ಅದೇ ಮಾತು ನಿಜವಾಗ್ಲಿ ಅಂತ ಪ್ರಾರ್ಥಿಸಿಬಿಡ್ರಿ' ಅಂದಿದ್ದರು. ನಂತರದ ಕೆಲವೇ ಕ್ಷಣಗಳಲ್ಲಿ `ತೇಜಸ್ವಿ ಇನ್ನಿಲ್ಲ' ಎಂಬುದೇ ನಿಷ್ಠುರ ಸತ್ಯ ಎಂದು ಅರ್ಥವಾದಾಗ `ಕಾಲನೆಂಬ ಕ್ರೂರಿಗೆ ಧಿಕ್ಕಾರವಿರಲಿ' ಎಂದು ಆಕ್ರೋಶದಿಂದ ಹೇಳಿ, ತೇಜಸ್ವಿಯವರ ಸಾವಿಗೆ ಕಂಬನಿ ಮಿಡಿದಿದ್ದರು.

ಸಾಹಿತಿಗಳು ಅಂದಾಕ್ಷಣ ಬೆಂಗಳೂರು- ಮೈಸೂರಿನ ಕಡೆಗೆ, ಧಾರವಾಡದ ದಿಕ್ಕಿಗೆ ಅಥವಾ ಬೆಳಗಾವಿ- ಮಂಗಳೂರಿನ ಕಡೆಗೆ ನೋಡುವುದು ಹಲವರ ರೂಢಿ. ನಮ್ಮ ಸಾಹಿತಿಗಳೆಲ್ಲ ಹೆಚ್ಚಾಗಿ ನಗರಗಳಲ್ಲೇ ವಾಸವಿರುವುದೇ ಇದಕ್ಕೆ ಕಾರಣ. ಆದರೆ ತೇಜಸ್ವಿ ಜಪ್ಪಯ್ಯ ಅಂದರೂ ಮೂಡಿಗೆರೆ ಬಿಟ್ಟು ಆಚೆಗೆ ಬರಲೇ ಇಲ್ಲ. ಆದರೆ, ನಾಡಿನ ಅದ್ಯಾವ ಊರಿಗೇ ಹೋದರೂ ಅವರನ್ನು ನೋಡಲು ಜಾತ್ರೆಗೆ ಬರುವಂತೆ ಜನ ಬರುತ್ತಿದ್ದರು. ಅವರ ಮಾತುಗಳನ್ನು ಆಸೆಯಿಂದ, ಆಸಕ್ತಿಯಿಂದ ಕೇಳುತ್ತಿದ್ದರು. ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ತೇಜಸ್ವಿಯವರಾದರೋ- ವರ್ಷಕ್ಕೆ ಒಂದೆರಡು ಬಾರಿ ಬೆಂಗಳೂರಿಗೆ ಬಂದರೆ; ಇಲ್ಲಿಂದ ಯಾವಾಗ ವಾಪಸ್ ಹೋಗುತ್ತೇನೋ ಎಂದು ಚಡಪಡಿಸುತ್ತಿದ್ದರು. ಗಿಜಿಗಿಜಿ ಟ್ರಾಫಿಕ್ ಮಧ್ಯೆ ಸಿಕ್ಕಿಬಿದ್ದರಂತೂ - `ಏನಯ್ಯಾ ಇದು ನರಕಾ? ನಂಗೆ ಒಂದು ದಿನಕ್ಕೇ ಸುಸ್ತಾಗಿ ಹೋಯ್ತು. ನೀವು ಇಡೀ ವರ್ಷ ಹ್ಯಾಗಯ್ಯಾ ಬದುಕ್ತೀರಿ ಇಲ್ಲಿ? ಒಂದಂತೂ ಗ್ಯಾರಂಟಿ ತಿಳ್ಕೊಳ್ಳಿ. ಏನಂದ್ರೆ- ಬೆಂಗ್ಳೂರಲ್ಲಿ ಟ್ರಾಫಿಕ್‌ನ ಮಧ್ಯೆ ಹತ್ತು ವರ್ಷ ಕಳೆದವನಿಗೆ ನರಕದಲ್ಲಿ ಬದುಕಿದ ಅನುಭವ ಆಗಿರುತ್ತೆ. ಹಾಗಾಗಿ ಸತ್ತ ಮೇಲೆ ಅವರಿಗೆ ನರಕದಲ್ಲಿ ಶಿಕ್ಷೇನೇ ಇರಲ್ಲ. ಆ ಒಂದೇ ಒಂದು ಕಾರಣಕ್ಕೆ ಪುಣ್ಯವಂತರು ನೀವು' ಎಂದು ನಗೆಯಾಡುತ್ತಿದ್ದರು.

ಸ್ವಾರಸ್ಯವೆಂದರೆ, ಸುದೀರ್ಘ ಚರ್ಚೆಯಲ್ಲಿ, ವಾಗ್ವಾದದಲ್ಲಿ ತೇಜಸ್ವಿಯವರಿಗೆ ಆಸಕ್ತಿ ಇರಲಿಲ್ಲ. ಯಾವುದೇ ಒಂದು ಕೆಲಸಕ್ಕೆ ಕೈ ಹಾಕಿದರೂ, ಹತ್ತು ಜನ ಒಪ್ಪುವಂತೆ ಅದನ್ನು ಮಾಡಿ ಮುಗಿಸುತ್ತಿದ್ದರು ನಿಜ. ಆದರೆ, ಅದರಲ್ಲಿ ಏನಾದರೂ ತಪ್ಪು ತೋರಿಸಿ- `ಏನ್ಸಾರ್ ಇದೂ' ಎಂದರೆ ಅವರು ಖಡಕ್ಕಾಗಿ ಉತ್ತರಿಸುತ್ತಿರಲಿಲ್ಲ. ಬದಲಾಗಿ ತೇಲಿಸಿ ಮಾತಾಡಿಬಿಡುತ್ತಿದ್ದರು. ಈ ಮಾತಿಗೆ ಒಂದು ಪುಟ್ಟ ಉದಾಹರಣೆ ಎಂದರೆ- ತೇಜಸ್ವಿಯವರ `ಕರ್ವಾಲೋ' ಪಠ್ಯಪುಸ್ತಕವಾಗಿ, ಹಾರುವ ಓತಿಯ ವಿಷಯ ಎಲ್ಲರ ಕುತೂಹಲಕ್ಕೂ, ಚರ್ಚೆಗೂ ಕಾರಣವಾಗಿದ್ದಾಗ- ಚಿಕ್ಕಮಗಳೂರು ಸೀಮೆಯ ಮಂಜಯ್ಯ ಎಂಬ ಕಾಲೇಜು ವಿದ್ಯಾರ್ಥಿ ಹಾರುವ ಓತಿಯಂಥ ಪ್ರಾಣಿ (!)ಯನ್ನೇ ಹಿಡಿದು ಒಟ್ಟಿದ್ದ. ನಂತರ- `ನಿಮ್ಮ ಕಾದಂಬರಿಯಲ್ಲಿ ಬರುವ ಹಾರುವ ಓತಿ ಇದೇನಾ ಸಾರ್?' ಎಂದು ಹಲವರು ಕೇಳಿದಾಗ- ತೇಜಸ್ವಿಯವರಿಂದ ಖಡಕ್ ಉತ್ತರ ಬರಲೇ ಇಲ್ಲ. (ಇಂಥವೇ ಕಾರಣಗಳಿಂದ ತೇಜಸ್ವಿಯವರಿಗೆ `ಪಲಾಯನವಾದಿ' ಎಂಬ ಹೆಸರೂ ಅಂಟಿಕೊಂಡಿತು!)

ನನ್ನ ಪಾಲಿಗೆ ಇದೇ ಶಾಶ್ವತ ಎಂದು ತೇಜಸ್ವಿ ಯಾವತ್ತೂ, ಯಾವುದಕ್ಕೂ ಗಟ್ಟಿಯಾಗಿ ಅಂಟಿಕೊಂಡವರೇ ಅಲ್ಲ. ನಾಡಿನ ಜನರೆಲ್ಲ ಅವರ ಯಾವುದೋ ಕಾದಂಬರಿ ಕುರಿತು ಚರ್ಚೆಯಲ್ಲಿ ತೊಡಗಿದ್ದಾಗ, ಈ ಮಹರಾಯರು ಕ್ಯಾಮರಾ ನೇತು ಹಾಕಿಕೊಂಡು ಫೋಟೊ ತೆಗೆಯುವಲ್ಲಿ ಬ್ಯುಸಿಯಾಗಿರುತ್ತಿದ್ದರು. `ಅಬ್ಬಾ, ತೇಜಸ್ವಿ ತೆಗೆದಿರುವ ಹಕ್ಕಿ ಪಕ್ಷಿಗಳ ಫೋಟೊ ಎಷ್ಟೊಂದು ಚೆಂದವಿದೆಯಲ್ಲ?' ಎಂದು ಎಲ್ಲರೂ ಬೆರಗಾಗುತ್ತಿದ್ದ ವೇಳೆಯಲ್ಲಿ ಅವರು ಪೇಂಟಿಂಗ್‌ಗೆ ಕೈ ಹಾಕಿರುತ್ತಿದ್ದರು. `ತೇಜಸ್ವಿಯವರು ಪೇಂಟಿಂಗ್ ಮಾಡ್ತಾ ಇರೋದು ಕಂಪ್ಯೂಟರ್‌ನಲ್ಲಂತೆ ಕಣ್ರೀ' ಎಂದು ಅವರಿವರು ಅನುಮಾನದಿಂದ ಪಿಸುಗುಡುತ್ತಿದ್ದ ಸಂದರ್ಭದಲ್ಲಿಯೇ, ಅಂಥ ಮಾತುಗಳಿಗೂ ತಮಗೂ ಸಂಬಂಧವೇ ಇಲ್ಲ ಎನ್ನುವಂತೆ ಮೂಡಿಗೆರೆಯ ತಮ್ಮ ಮನೆಯೆದುರಿನ ಕೆರೆಯಲ್ಲಿ ಅವರು ಮೀನು ಹಿಡಿಯುತ್ತಾ ಕೂತುಬಿಟ್ಟಿರುತ್ತಿದ್ದರು.

ಇದನ್ನು ಕಂಡ ಯಾರಾದರೂ ಗಾಬರಿಯಿಂದ- `ಏನ್ಸಾರ್ ಇದೂ?' ಎಂದು ಪ್ರಶ್ನಿಸಿದರೆ- `ರೀ, ನೀವು ಅಂದುಕೊಂಡಂತೆ ಅಥವಾ ನೀವು ಬಯಸಿದಂತೆ ಬದುಕಲಿಕ್ಕೆ ನನ್ನಿಂದ ಸಾಧ್ಯವಿಲ್ಲ. ನನಗೇನು ಇಷ್ಟಾನೋ ಅದನ್ನು ನಾನು ಮಾಡ್ತೀನಿ. ಪುಸ್ತಕ ಬರೀಬೇಕು ಅನ್ಸಿದ್ರೆ ಪುಸ್ತಕ ಬರೀತೀನಿ. ಫೋಟೊ ತೆಗೀಬೇಕು ಅನ್ಸಿದ್ರೆ ಫೋಟೊ ತೆಗೀತೀನಿ. ಚಿತ್ರ ಬರೀಬೇಕು ಅನ್ಸಿದ್ರೆ ಹಾಗೇ ಮಾಡ್ತೀನಿ. ನೀವು ಯಾರ್ರೀ ಕೇಳೋಕೆ ಎಂದು ರೇಗುತ್ತಿದ್ದರು. ಸ್ವಲ್ಪ ಚೆನ್ನಾಗಿ ಪರಿಚಯವಿದ್ದವರನ್ನು `ಬಡ್ಡೀಮಕ್ಳ' ಎಂದು ಬಯ್ದೇ ಮಾತಾಡಿಸುತ್ತಿದ್ದರು. ದಿಢೀರನೆ ಅವರ ಮನೆಗೆ ಹೋದರೆ `ಶನಿಗಳಾ, ಈಗ ಬಂದ್ರಾ? ಬನ್ನಿ ಕಾಫಿ ಕುಡಿಯೋಣ' ಎನ್ನುತ್ತಾ ಮಾತಿಗೆ ಕೂರುತ್ತಿದ್ದರು. ಜಾಸ್ತಿ ಸಲುಗೆಯವರಾದರೆ- `ಥೂ ಹಲ್ಕಾ' ಎಂದೇ ಮಾತು ಶುರು ಮಾಡುತ್ತಿದ್ದರು! ಮತ್ತು ಐದೇ ನಿಮಿಷದ ಮಾತುಕತೆಯಲ್ಲೇ ರಕ್ತ ಸಂಬಂಧಿಗಿಂತ ಹೆಚ್ಚಿನ ಆತ್ಮೀಯರಾಗುತ್ತಿದ್ದರು. ಸ್ವಾರಸ್ಯವೆಂದರೆ, ತೇಜಸ್ವಿಯವರಿಂದ ಹಾಗೆಲ್ಲ ಬೈಸಿಕೊಂಡಿದ್ದಕ್ಕೆ ಯಾರೂ ಬೇಸರ ಪಡುತ್ತಿರಲಿಲ್ಲ. ಬದಲಿಗೆ- `ಅವರು ಹೇಗೆಲ್ಲಾ ಬಯ್ದರು' ಎಂಬುದನ್ನು ಗೆಳೆಯರ ಮುಂದೆ ಹೆಮ್ಮೆಯಿಂದಲೇ ಹೇಳಿಕೊಳ್ಳುತ್ತಿದ್ದರು:

***
`ಕುವೆಂಪು ಅವರ ಸುಪುತ್ರನಾದರೂ ನಾನು ಅಸಾಧಾರಣ ಬುದ್ಧಿವಂತನಂತೂ ಖಂಡಿತ ಅಲ್ಲ. ಅದರಲ್ಲೂ ಪಿಯೂಸಿ, ಡಿಗ್ರಿಯಲ್ಲಿದ್ದಾಗ ನಾನೂ ಕೂಡ ಡುಮ್ಕಿ ಹೊಡೆದವನೇ' ಎಂದು ಸಂಕೋಚವಿಲ್ಲದೆ ಬರೆದುಕೊಂಡವರು ತೇಜಸ್ವಿ. ಅವರ ಸೂಪರ್ಬ್ ಎನ್ನಿಸುವಂಥ ಇಂಗ್ಲಿಷ್ ಭಾವಾನುವಾದದ ಬಗ್ಗೆ ಎಲ್ಲರೂ ಮೆಚ್ಚುಗೆಯಿಂದ ಮಾತಾಡುತ್ತಿದ್ದಾಗಲೇ, `ಲಂಕೇಶ್ ಪತ್ರಿಕೆ'ಯಲ್ಲಿ ಧಾರಾವಾಹಿಯಾಗಿ ಪ್ರಕಟವಾದ `ಅಣ್ಣನ ನೆನಪು'ನಲ್ಲಿ ಹೀಗೆ ಬರೆದಿದ್ದರು ತೇಜಸ್ವಿ: `ನಾನೂ ಅನೇಕ ಸಾರಿ ಫೇಲಾಗಿದ್ದೇ ಇಂಗ್ಲಿಷಿನಲ್ಲಿ. ಏನನ್ನು ಬೇಕಾದರೂ ಕಲಿಯಬಲ್ಲ ಸಾಮರ್ಥ್ಯವಿರುವ ನನಗೆ ಮೊದಲಿನಿಂದಲೂ ಗಣಿತ ಮತ್ತು ಇಂಗ್ಲಿಷ್ ಕೊಟ್ಟಿರುವ ತೊಂದರೆ ಅಷ್ಟಿಷ್ಟಲ್ಲ. ನನಗೆ ಈಗಲೂ ಇಂಗ್ಲಿಷಿನಲ್ಲಿ ಓದುವುದು, ಮಾತಾಡುವುದು ಎಲ್ಲ ಸುಲಭ ಸಾಧ್ಯವಿದ್ದರೂ, ಅದೊಂದು ಕನ್ನಡದ ವಿಸ್ತರಣೆಯಂತಾಗ ಮಾತ್ರ ಸಾಧ್ಯವೇ ಹೊರತು ಇಂಗ್ಲಿಷ್ ಭಾಷೆ ಎಂದು ಪ್ರತ್ಯೇಕವಾಗಿ ಪರಿಗಣಿಸಿದ ಕೂಡಲೇ ಸಾಧ್ಯವಾಗುವುದೇ ಇಲ್ಲ. ಮೊನ್ನೆ ಎಲ್ಲೋ ಭಾಷಣ ಮಾಡಬೇಕೆಂದು ಎದ್ದಾಗ `ಇಂಗ್ಲಿಷಿನಲ್ಲಿ ಮಾತನಾಡಿ' ಎಂದರು, ನನ್ನ ಬಾಯಿಂದ ಮಾತೇ ಹೊರಡಲಿಲ್ಲ... ಇಂಗ್ಲಿಷಿನಲ್ಲಿ ಬರೆಯುವುದೆಂದರೆ ನನಗೆ ತಲೆನೋವು. ಬಹುಶಃ ಸ್ಪೆಲ್ಲಿಂಗ್ ಇರುವ ಯಾವ ಭಾಷೆಯನ್ನೂ ನಾನು ಕಲಿಯಲಾರೆನೆಂದು ಅನಿಸುತ್ತದೆ. ಅದರಲ್ಲೂ ಇಂಗ್ಲಿಷ್ ಹುಚ್ಚರ ಭಾಷೆಯೆಂದು ನನ್ನ ಅಭಿಮತ. ಮೊದಲೇ ಸ್ಪೆಲ್ಲಿಂಗ್ ಜ್ಞಾಪಕ ಇಟ್ಟುಕೊಳ್ಳುವುದು ತಲೆ ನೋವು. ಅದರ ಜತೆಗೆ ಸ್ಪೆಲ್ಲಿಂಗೇ ಒಂದು ತರ, ಅದನ್ನು ಉಚ್ಚರಿಸುವುದು ಇನ್ನೊಂದು ತರ ಆದರೆ ನಾನು ಕಲಿಯುವುದಾದರೂ ಹೇಗೆ? ನಾನು ಮಿಡಲ್‌ಸ್ಕೂಲ್, ಹೈಸ್ಕೂಲ್ ಓದುತ್ತಿದ್ದಾಗ ಅಣ್ಣ (ಕುವೆಂಪು) ನನಗೆ ಇಂಗ್ಲಿಷ್ ಬರೆಯುವುದನ್ನು ಹೇಳಿಕೊಡಲು ತುಂಬಾ ಪ್ರಯತ್ನಪಟ್ಟರು. ಸ್ಪೆಲ್ಲಿಂಗ್ ಉಪಯೋಗಕ್ಕೆ ಇಂಗ್ಲಿಷ್ ಭಾಷೆಯಲ್ಲಿ ಒಂದು ನಿರ್ದಿಷ್ಟ ಸಾರ್ವತ್ರಿಕ ಸೂತ್ರವೇ ಇಲ್ಲದಾಗ ಅವರು ತಾನೆ ಹೇಗೆ ಹೇಳಿಕೊಟ್ಟಾರು? ಇಂಗ್ಲಿಷಿನಲ್ಲಿ ಓದುವ ಮಾತಾಡುವುದೆಲ್ಲ ಬಂದರೂ ಈ ಸ್ಪೆಲ್ಲಿಂಗಿನ ಪ್ರಾರಬ್ಧದ ದೆಸೆಯಿಂದಾಗಿ ನಾನು ಇಂಗ್ಲಿಷಿನಲ್ಲಿ ಯಾವತ್ತೂ ಒಂದೇ ಸಾರಿಗೆ ಪಾಸಾಗಲಿಲ್ಲ...'

ಹೀಗೆ- `ಸಹಜ ಸೋಜಿಗದ ಅಪ್ಪಟ ಮನುಷ್ಯ'ರಾಗಿದ್ದ ತೇಜಸ್ವಿಯವರಿಗೆ ಯಾರು ಬೇಕಾದರೂ ಕಾಗದ ಬರೆಯಬಹುದಿತ್ತು. `ಕೆ.ಪಿ. ಪೂರ್ಣಚಂದ್ರ ತೇಜಸ್ವಿ- ಹ್ಯಾಂಡ್ ಪೋಸ್ಟ್, ಮೂಡಿಗೆರೆ, ಚಿಕ್ಕಮಗಳೂರು' ಎಂದು ವಿಳಾಸ ಬರೆದು ಕಾಗದ ಹಾಕಿದರೆ- ನಂತರದ ವಾರದೊಳಗೆ, ಅದ್ಯಾರೇ ಅಪರಿಚಿತರಾಗಿದ್ದರೂ ಸರಿ; ತೇಜಸ್ವಿ ಉತ್ತರ ಬರೆಯುತ್ತಿದ್ದರು. ಕಾಗದದ ಮೇಲ್ಭಾಗದಲ್ಲಿ ಗೆಳೆಯರಾದ/ಆತ್ಮೀಯರಾದ ಎಂದೇ ಆರಂಭಿಸುತ್ತಿದ್ದರು. ಆ ಮೂಲಕ ಒಂದೇ ಪತ್ರದ ನೆಪದಲ್ಲಿ ಜನ್ಮಾಂತರದ ಬಂಧುವಾಗಿ ಬಿಡುತ್ತಿದ್ದರು. ಹೀಗೆ ಕಾಗದ ಬರೆದು ತೇಜಸ್ವಿಯವರಿಗೆ ಯಾವ ಪ್ರಶ್ನೆಯನ್ನಾದರೂ ಕೇಳಬಹುದಿತ್ತು. ಉತ್ತರ ಪಡೆಯಬಹುದಿತ್ತು.

ತೇಜಸ್ವಿಯವರ ಬಗೆಗೆ ಅಪಾರ ಅಭಿಮಾನ ಹೊಂದಿರುವ ಪರಿಸರ ಚಳವಳಿ ಹಿನ್ನೆಲೆಯ ಜಿ. ಕೃಷ್ಣಪ್ರಸಾದ್ ಈಗ್ಗೆ 20 ವರ್ಷದ ಹಿಂದೆ ಅವರಿಗೆ ಪತ್ರ ಬರೆದು- ಕನ್ನಡದಲ್ಲಿ ವಿಜ್ಞಾನ ಸಾಹಿತ್ಯದ ಬೆಳವಣಿಗೆಯ ಬಗ್ಗೆ ಏನನ್ನುತ್ತೀರಿ? ಇಂಗ್ಲಿಷಿನಿಂದ ಅನುವಾದಿಸುವ ಸಂದರ್ಭ ಬಂದಾಗ- ಸೂಕ್ತ ಪಾರಿಭಾಷಿಕ ಪದಗಳು ಸಿಗದಿದ್ದರೆ ಏನು ಮಾಡಬೇಕು? ಕಿರಿಯರಿಗೆ ನಿಮ್ಮ ಸಲಹೆ ಏನು? ನೀವು ವಿಜ್ಞಾನದ ಲೇಖಕರೆ?' ಎಂದು ಕೇಳಿದ್ದರು.

ಅದಕ್ಕೆ ತೇಜಸ್ವಿಯವರ ಉತ್ತರ ಹೀಗಿತ್ತು: `ಕನ್ನಡದಲ್ಲಿ ವಿಜ್ಞಾನ ಸಾಹಿತ್ಯದ ಬೆಳವಣಿಗೆ ಖಂಡಿತ ಸಮಾಧಾನಕರವಾಗಿಲ್ಲ. ಪಾರಿಭಾಷಿಕ ಪದಗಳು ಕನ್ನಡದಲ್ಲಿ ಹೆಚ್ಚಿಗೆ ಇಲ್ಲ. ಕನ್ನಡದ ಜಾಯಮಾನಕ್ಕೆ ಒಗ್ಗುವಂಥ ಪದಗಳಿದ್ದರೆ ಕನ್ನಡ ಪದ ಬಳಸಬಹುದು. ಇಲ್ಲದಿದ್ದರೆ ಇಂಗ್ಲಿಷಿನವನ್ನೇ ಕನ್ನಡದಲ್ಲಿ ಉಪಯೋಗಿಸಿ, ಭಾಷೆ ಬೆಳೆಯುವುದೇ ಹೀಗೆ. ಅನೇಕ ಪಾರಿಭಾಷಿಕ ಪದಗಳು ಇಂಗ್ಲಿಷಿನವೂ ಅಲ್ಲ. ಅವರೂ ಬೇರೆ ಬೇರೆ ಭಾಷೆಯ ಪದಗಳನ್ನೇ ತಮ್ಮವನ್ನಾಗಿಸಿಕೊಂಡಿದ್ದಾರೆ. ಕಿರಿಯ ಬರಹಗಾರರಿಗೆ ನಾನು ಹೇಳುವುದೇನೂ ಇಲ್ಲ. ನಾನು ಮೂಲತಃ ವಿಜ್ಞಾನದ ವಿದ್ಯಾರ್ಥಿಯಲ್ಲ. ನನಗೆ ಕೆಲವು ವಿಷಯ ತುಂಬಾ ಇಷ್ಟವಾದ್ದರಿಂದ ವಿಜ್ಞಾನದ ಲೇಖಕನಾಗಿದ್ದೇನೆ, ಅಷ್ಟೆ...'

ಇನ್ನೊಂದು ಸಂದರ್ಭದಲ್ಲಿ ತೇಜಸ್ವಿಯವರ ಅಪರೂಪದ ಫೋಟೊಗ್ರಫಿ ಕಂಡು ಬೆರಗಾದ ಶಿಡ್ಲಘಟ್ಟದ ಡಿ.ಜಿ. ಮಲ್ಲಿಕಾರ್ಜುನ ಒಂದು ಮೆಚ್ಚುಗೆಯ ಪತ್ರ ಬರೆದರೆ- ಅದಕ್ಕೆ ಉತ್ತರಿಸಿದ ತೇಜಸ್ವಿ- `ತಮ್ಮ ಅಭಿನಂದನೆಗಳಿಗೆ ನನ್ನ ಕೃತಜ್ಞತೆಗಳು. ಪ್ರಶಸ್ತಿಗಳಿಗಿಂತ ತಮ್ಮಂಥವರ ಮೆಚ್ಚುಗೆ ಮಾತುಗಳು ಸಾವಿರ ಪಾಲು ಬೆಲೆ ಬಾಳುವಂಥವೆಂದು ನನ್ನ ಅನಿಸಿಕೆ' ಎಂದು ಬರೆದಿದ್ದರು!

***
ನೆನಪಿಸಿಕೊಂಡಷ್ಟೂ ನೆನಪಾಗುತ್ತಲೇ ಇರುವ ಮಹಾಚೇತನ ತೇಜಸ್ವಿ. ಅವರ ಕಾಲದಲ್ಲಿ ನಾವಿದ್ದೆವಲ್ಲ ಎಂದುಕೊಂಡಾಗ ಖುಷಿಯಾಗುತ್ತದೆ, ಹೆಮ್ಮೆಯಾಗುತ್ತದೆ. ಅವರು ಜತೆಗಿಲ್ಲ ಅನಿಸಿದಾಗ ಮಾತ್ರ- ಮನೆಯ ಹಿರಿಯನೊಬ್ಬ ಒಂದು ಮಾತೂ ಹೇಳದೆ ಹೋಗಿಬಿಟ್ಟಾಗ ಆಗುತ್ತದಲ್ಲ- ಅಂಥ ಸಂಕಟವಾಗುತ್ತದೆ ಮತ್ತು ಈ ಸಂಕಟ ಜತೆಗೇ ಇರುತ್ತದೆ- ನಾವಿರುವ ತನಕ!
User Comments
americavasi 07 Apr 2009 09:08 pm
very nice article. please keep writing. I like your style of writing.
ಕರ್ಣ 07 Apr 2009 04:36 pm
ಸಂಶೋಧನಾತ್ಮಕ ಬರಹಗಳಿಂದ ನಮ್ಮನ್ನು ಚಕಿತವಾಗಿಸಿದ ತೇಜಸ್ವಿಯವರ ಬದುಕೇ ಒಂದು ಅಧ್ಯಯನಕ್ಕೆ ಯೋಗ್ಯವಾಗಿದೆ. ಅವರನ್ನು ಪುನಃ ನೆನಪಿಸಿದ್ದಕ್ಕೆ ವಂದನೆಗಳು.
[ ಅಭಿಪ್ರಾಯ ಬರೆಯಿರಿ ]
IPL, Himachal Pradesh Cricket Association Stadium, Dharmasala
Kings XI Punjab: 9 / 0, 1 Overs
1st Test , Lord's Cricket Ground, St John's Wood
West Indies: 83 / 2, 29 Overs
IPL, Feroz Shah Kotla, Delhi
Match starts at 08:00 pm IST  
Follow Oneindia Kannada on Twitter
Oneindia Kannada Facebook fan page
Write Comments on this Article