ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲೆಲ್ಲೂ ನಗೆಯಾ ಪನ್ನೀರ ಚೆಲ್ಲುವ ಮೈಸೂರು ದಸರಾ

By * ಬಿ.ಎಂ. ಲವಕುಮಾರ್, ಮೈಸೂರು
|
Google Oneindia Kannada News

Sri Vishvesha Teertha Swamiji inaugurates Mysore Dasara 2011
ಮೈಸೂರು ದಸರಾಕ್ಕೆ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಜಿಯವರು ಚಾಮುಂಡಿದೇವಿಗೆ ಪೂಜೆ ಸಲ್ಲಿಸುವುದರೊಂದಿಗೆ ಸೆಪ್ಟೆಂಬರ್ 28ರಿಂದ ವಿಧ್ಯುಕ್ತ ಚಾಲನೆ ದೊರೆತಿದ್ದು, ಒಂಬತ್ತು ದಿನಗಳ ಕಾಲ ದಸರಾ(ನವರಾತ್ರಿ) ಆಚರಣೆ ಆರಂಭವಾಗಿದೆ. ಸುಮಾರು ನಾಲ್ಕು ಶತಮಾನಗಳನ್ನು ಕಂಡಿರುವ ಮೈಸೂರು ದಸರಾ ಇತರೆಡೆಯಲ್ಲಿ ಆಚರಿಸಲ್ಪಡುವ ದಸರಾಕ್ಕಿಂತ ವಿಭಿನ್ನ... ವಿಶಿಷ್ಟ... ಹೀಗಾಗಿ ವಿಶ್ವವಿಖ್ಯಾತಿಗಳಿಸಿದೆ.

ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ದಂಪತಿಗಳು ಹಾಜರಿದ್ದು, ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಶತಮಾನಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವ ಶಾಂತಿ, ನೆಮ್ಮದಿ, ಸಮೃದ್ಧಿಯ ಸಂಕೇತವಾಗಿದೆ ಎಂದು ಅವರು ಗೌಡ ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಮೈಸೂರು ಉಸ್ತುವಾರಿ ಸಚಿವ ಎ ರಾಮದಾಸ್ ಹಾಜರಿದ್ದರು.

ವಿದ್ಯುತ್ ಅಲಂಕೃತ ಭವ್ಯ ಅರಮನೆ.... ಮಹಾರಾಜರ ಖಾಸಗಿ ದರ್ಬಾರ್.... ಚಿನ್ನದ ಅಂಬಾರಿ ಹೊತ್ತ ಗಜಪಡೆಯ ಗಾಂಭೀರ್ಯದ ನಡಿಗೆಯ ಜಂಬೂ ಸವಾರಿ.... ಪಂಜಿನ ಕವಾಯತು.... ಹೀಗೆ ಗತಕಾಲದ ರಾಜವೈಭವವನ್ನು ಹತ್ತಿರದಿಂದ ನೋಡಬೇಕಾದರೆ ಅದು ಮೈಸೂರು ದಸರಾದಲ್ಲಿ ಮಾತ್ರ ಸಾಧ್ಯ. ಹಾಗೆನೋಡಿದರೆ ಮೈಸೂರು ದಸರಾ ಆಚರಣೆ ಇಂದು ನಿನ್ನೆಯದಲ್ಲ. ಇದಕ್ಕೆ ಗತದಿನಗಳ ಇತಿಹಾಸವಿದೆ.

ದಸರಾ ಅರ್ಥಾತ್ ವಿಜಯದಶಮಿ ಇದು ದುಷ್ಟಶಕ್ತಿಯನ್ನು ನಿಗ್ರಹಿಸಿ ವಿಜಯಪಡೆದ ಸಂಕೇತವೂ ಹೌದು. ವಿಜಯದಶಮಿಯನ್ನು ವಿಜಯನಗರದ ಅರಸರು ಆಚರಿಸಿಕೊಂಡು ಬರುತ್ತಿದ್ದರಂತೆ. ಆದರೆ ಅವರ ಸಾಮ್ರಾಜ್ಯ ಪತನಗೊಂಡ ಬಳಿಕ ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜರಾಗಿದ್ದ ಮೈಸೂರಿನ ಯದುವಂಶಸ್ಥರು ಇದನ್ನು ಮುಂದುವರೆಸಿಕೊಂಡು ಬಂದರು ಎಂದು ಇತಿಹಾಸ ಹೇಳುತ್ತದೆ.

ಶ್ರೀರಂಗಪಟ್ಟಣವನ್ನು ರಾಜಧಾನಿಯನ್ನಾಗಿಸಿಕೊಂಡು ರಾಜ್ಯಭಾರ ಮಾಡುತ್ತಿದ್ದ ರಾಜಒಡೆಯರ್ 1610ರಲ್ಲಿ ವಿಜಯನಗರ ಪರಂಪರೆಯ ಪ್ರತೀಕವಾಗಿದ್ದ ವಿಜಯದಶಮಿ ಆಚರಣೆಯನ್ನು ಮೊದಲ ಬಾರಿಗೆ ಆಚರಿಸಿದರು. ಆ ನಂತರ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ (1799-1868) ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಲ್ಲದೆ, ಮೈಸೂರಿನಲ್ಲಿ ದಸರಾ ಆಚರಣೆಯನ್ನು ಮುಂದುವರೆಸಿದರು. ನಂತರದ ಕಾಲಾವಧಿಯಲ್ಲಿ ಇದು ತನ್ನದೇ ಆದ ವೈಭವಪಡೆಯುವುದರೊಂದಿಗೆ ವಿಶ್ವವಿಖ್ಯಾತ ಪಡೆದಿದ್ದು ಇತಿಹಾಸ. [ಗ್ಯಾಲರಿ : ವೈಭವದ ಮೈಸೂರು ದಸರಾ]

ನವರಾತ್ರಿ ಆಚರಣೆ :
ಮೈಸೂರು ದಸರಾದ ಸಂದರ್ಭ ನಡೆಯುವ ಆಚರಣೆಗಳಲ್ಲಿಯೂ ಹತ್ತು ಹಲವು ವೈಶಿಷ್ಟ್ಯತೆಗಳು ಇರುವುದನ್ನು ನಾವು ಕಾಣಬಹುದು. ನವರಾತ್ರಿ ಆರಂಭದ ಒಂಭತ್ತು ದಿನಗಳ ಕಾಲ ಅಂದರೆ ಪಾಡ್ಯದಿಂದ ಬಿದಿಗೆ, ತದಿಗೆ, ಚತುರ್ಥಿ, ಪಂಚಮಿ, ಷಷ್ಠಿ, ಸಪ್ತಮಿ, ಅಷ್ಠಮಿ, ನವಮಿ ಹೀಗೆ ಒಂಭತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳು ಚಾಮುಂಡಿಬೆಟ್ಟ ಹಾಗೂ ಅಂಬಾವಿಲಾಸ ಅರಮನೆಯಲ್ಲಿ ನಡೆದರೆ, ಆ ನಂತರ ವಿಜಯದಶಮಿಯಂದು ಜಂಬೂ ಸವಾರಿಯೊಂದಿಗೆ ಬನ್ನಿಮಂಟಪಕ್ಕೆ ತೆರಳಿ ಬನ್ನಿ ಕಡಿಯುವುದರೊಂದಿಗೆ ದಸರಾ ಮುಗಿದು ಬಿಡುತ್ತದೆ. ಆದರೆ ಈ ಹತ್ತು ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳಿವೆಯಲ್ಲ ಅವು ದಸರಾಕ್ಕೆ ಮೆರಗು ನೀಡುತ್ತವೆ.

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಧಿವಿಧಾನದಂತೆ ಪೂಜೆ ಸಲ್ಲಿಸಿ ದಸರಾಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗುತ್ತದೆ. ಬಳಿಕ ಪ್ರತಿದಿನವೂ ದಸರಾ ಸಂಗೀತೋತ್ಸವ, ದಸರಾ ನಾಟಕೋತ್ಸವ, ದಸರಾ ಜನಪದೋತ್ಸವ, ದಸರಾ ಕವಿಗೋಷ್ಠಿ, ದಸರಾ ಚಲನಚಿತ್ರೋತ್ಸವ, ದಸರಾ ಫಲಪುಷ್ಪಪ್ರದರ್ಶನ, ದಸರಾ ಕುಸ್ತಿ ಪ್ರದರ್ಶನ, ಬೊಂಬೆ ಪ್ರದರ್ಶನ, ದಸರಾ ಆಹಾರ ಮೇಳ, ಯುವದಸರಾ ಹೀಗೆ ವಿವಿಧ ಕಾರ್ಯಕ್ರಮಗಳು ನಡೆದರೆ, ದಸರಾ ಪ್ರಯುಕ್ತ ಕೆಲವು ಸಂಘಟನೆಗಳು ಹಲವು ಕಾರ್ಯಕ್ರಮಗಳನ್ನು ನಡೆಸುತ್ತವೆ. [ಖಾಸಗಿ ದರ್ಬಾರ್ ಹೆಂಗಿರತ್ತೆ ಗೊತ್ತಾ?]

English summary
Mysore Dasara 2011 has begun in Mysore with customary pooja to Goddess Chamundeshwari by Pejavar Sri Vishvesha Teertha Swamiji. Here is comprehensive story how khasagi darbar of Wodeyar family, Jambu Savari though out the Navaratri festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X