ಸ್ಥಳೀಯ ಚುನಾವಣೆ : ವಿವಿಧ ಜಿಲ್ಲೆಗಳ ಸುದ್ದಿಗಳು
ಬೆಂಗಳೂರು ಮಹಾನಗರ ಪಾಲಿಕೆ ಹೊರತು ಪಡಿಸಿ, ಉಳಿದ ಜಿಲ್ಲೆಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್ ಪ್ರಕಾರ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಇತರೆ ಬ್ಯಾಂಕುಗಳು ಜೀವವಿಮಾ ನಿಗಮಗಳಿಗೆ ಮತದಾನ ದಿನದಂದು ವೇತನ ಸಹಿತ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಧಾರವಾಡ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಆರೋಪಿಸಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಜನರು ಪ್ರತಿಭಟನೆ ನಡೆಸಿದರು. ಅರ್ಹ ಮತದಾರರ ಹೆಸರನ್ನು ಸೇರಿಸದಿದ್ದರೆ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರಾಮನಗರ : ಬಿಜೆಪಿ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಸುಮಾರು 1000ಕ್ಕೂ ಅಧಿಕ ಸೀರೆಗಳನ್ನು ರಾಮನಗರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಳ್ಳಾರಿ : ರಾಜ್ಯಸಭಾ ಸದದ್ಯ ಅನಿಲ್ ಲಾಡ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಬಳ್ಳಾರಿಯ 33 ಮತ್ತು 34 ನೇ ವಾರ್ಡ್ ನಲ್ಲಿ ಬೀದಿದೀಪ ಅಳವಡಿಸುತ್ತಿದ್ದರು ಎಂದು ಆರೋಪಿಸಿ 25 ಬೀದಿ ದೀಪಗಳನ್ನು ಕೌಲ್ ಬಜಾರ್ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಅನಿಲ್ ಲಾಡ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿಕೊಳ್ಳುವ ಸಂಭವಿದೆ.
ಬಾಗಲಕೋಟೆ : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಆದರೂ ಬಾಗಲಕೋಟೆ ನಗರದಲ್ಲಿ ಕೆಜೆಪಿ ಅಭ್ಯರ್ಥಿ ಪರವಾಗಿ ಬೈಕ್ ನಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದ ನಾಲ್ವರನ್ನು ಬಂಧಿಸಿರುವ ಪೊಲೀಸರು, ಎರಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಯಚೂರು : ರಾಯಚೂರು ಜಿಲ್ಲೆಯ ಮದಲಾಪುರ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 61 ಕೇಸ್ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಮದ್ಯವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು: ಆಡಳಿತ ನಡೆಸುವ ಬದಲು ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಕಮೀಷನ್ ಪಕ್ಷ ಎಂದು ಕೆಪಿಸಿಸಿ ವಕ್ತಾರ ಬಿ.ಎಲ್.ಶಂಕರ್ ವಾಗ್ದಾಳಿ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರು ವಿವಿ ಕುಲಪತಿಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ಮಾಡಿದ ಬೆಜೆಪಿ ಆಡಳಿತ ನಡೆಸುತ್ತಿಲ್ಲ ಕೇವಲ ಪಕ್ಷಕ್ಕೆ ಕಮೀಷನ್ ಸಂಗ್ರಹಿಸುತ್ತಿದೆ ಎಂದು ದೂರಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ