ಕಲಾಸಿಪಾಳ್ಯದಲ್ಲಿ ಬಸ್ ನಿಲ್ದಾಣ ಕಟ್ಟತ್ತಂತೆ ಸರ್ಕಾರ!
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಾಸಿಪಾಳ್ಯದಲ್ಲಿ ಬಸ್ ನಿಲ್ದಾಣವಿಲ್ಲದೇ ವಾಹನ ಸಂಚಾರ ನಿಯಂತ್ರಿಸುವುದು ಕಷ್ಟವಾಗಿದೆ. ಸರ್ಕಾರ ಬಸ್ ನಿಲ್ದಾಣ ನಿರ್ಮಿಸಲು ಚಿಂತನೆ ನಡೆಸಿದೆ. ಯೋಜನೆ ಸಿದ್ದಪಡಿಸಲಾಗಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದರು.
ಖಾಸಗಿ, ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಒಂದೇ ಕಡೆ ನಿಲ್ಲುವ ದೊಡ್ಡ ಬಸ್ ನಿಲ್ದಾಣವನ್ನು 240 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ನಗರದಲ್ಲಿರುವ ಟಿಟಿಎಂಸಿ ಮಾದರಿಯಲ್ಲಿಯೇ ಕಲಾಸಿಪಾಳ್ಯ ಬಸ್ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.
ಈ ಯೋಜನೆಯ ಕಾಮಗಾರಿ ಆರಂಭಿಸಲು ನಾಲ್ಕು ತಿಂಗಳಿನಲ್ಲಿ ಟೆಂಡರ್ ಕರೆಯಲಾಗುವುದು. ಬಜೆಟ್ ನಲ್ಲಿ ಬೆಂಗಳೂರಿಗೆ ನೀಡುವ ಹಣದಲ್ಲಿ ಬಸ್ ನಿಲ್ದಾಣದ ಕಾಮಗಾರಿಗಾರಿಗೂ ಅನುದಾನ ನೀಡುವಂತೆ, ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಹೇಗಿರುತ್ತೆ ನಿಲ್ದಾಣ : ಆತ್ಯಾಧುನಿಕ ತಂತ್ರಜ್ಞಾನ ಬಳಸಿ ಕಲಾಸಿಪಾಳ್ಯ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಮೊದಲನೇ ಮಹಡಿಯಲ್ಲಿ ಖಾಸಗಿ ಬಸ್ ನಿಲುಗಡೆಗೆ ಅವಕಾಶ ನೀಡಲಾಗುತ್ತದೆ.
ಎರಡು ಮತ್ತು ಮೂರನೇ ಮಹಡಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಹಾಗೂ ಬಿಎಂಟಿಸಿ ಬಸ್ ನಿಲ್ದಾಣವಿರುವಂತೆ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ನಾಲ್ಕನೇ ಮಹಡಿಯಲ್ಲಿ ವಾಣಿಜ್ಯ ಕಟ್ಟಡಗಳಿಗಾಗಿ ಅವಕಾಶ ಕಲ್ಪಸಲಾಗುವುದು ಎಂದರು. ಬಸ್ ನಿಲ್ದಾಣದ ಕಾಮಗಾರಿ 24 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರ್ ಟಿಒ ಅಧಿಕಾರಿಗಳಿಗೆ ಸಚಿವರ ಶಾಕ್ : ಜಯನಗರದ ಆರ್ ಟಿಒ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಶಾಕ್ ನೀಡಿದ್ದಾರೆ. ಅಧಿಕಾರಿಗಳು ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಬುಧವಾರ ಅವರು ಆರ್ ಟಿಒ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾಲ್ವರು ಅಧಿಕಾರಿಗಳು ಗೈರು ಹಾಜರಾಗಿರುವುದು ತಿಳಿಯಿತು.