ಶಾಶ್ವತ ನೀರಾವರಿ ಯೋಜನೆಗೆ ಮುನಿಯಪ್ಪ ಮನವಿ
ಬೆಂಗಳೂರು, ಜು. 8 : ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆಯ ಅನುಷ್ಠಾನ ಕುರಿತಂತೆ ಪರಮಶಿವಯ್ಯ ವರದಿಯನ್ನು ಯಥಾವತ್ತು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕೇಂದ್ರ ಸಚಿವ, ಕೋಲಾರದ ಸಂಸದ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದ ಆಯೋಗ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದೆ.
ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿ ಪರಮಶಿವಯ್ಯ ವರದಿಯನ್ನು ಯಥಾವತ್ತು ಅನುಷ್ಠಾನಗೊಳಿಸಲು ಸವಿವರ ಯೋಜನಾ ವರದಿ ಹಾಗೂ ಯೋಜನೆಗೆ ಬೇಕಾಗಿರುವ ಅಗತ್ಯ ಅನುದಾನವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿಯೇ ಮೀಸಲಿರಿಸುವಂತೆ ಮನವಿ ಸಲ್ಲಿಸಿದರು.
ನಿಯೋಗದ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಶೇಷ ಗಮನಹರಿಸಲಿದೆ. ಈ ಹಿನ್ನೆಲೆಯಲ್ಲಿ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕರಾದ ಡಾ: ಸುಧಾಕರ್, ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖರಾದ ವಿ.ಆರ್. ಸುದರ್ಶನ್, ಕೆ. ಬಚ್ಚೇಗೌಡ, ಎನ್. ಜ್ಯೋತಿರೆಡ್ಡಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಅವರೂ ಸೇರಿದಂತೆ ಹಲವು ಗಣ್ಯರು ಈ ನಿಯೋಗದಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಮತ್ತೊಂದು ಮನವಿ ಸಲ್ಲಿಸಿದ ಮುನಿಯಪ್ಪ ಅವರು, ಶ್ರೀನಿವಾಸಪುರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರೈಲ್ವೆ ಕೋಚ್ ಫ್ಯಾಕ್ಟರಿಗೆ 1180 ಎಕರೆ ಜಮೀನು ಮತ್ತು ಕಾರ್ಖಾನೆಯ ಸ್ಥಾಪನೆಗೆ ರಾಜ್ಯ ಸರ್ಕಾರ ಈ ಹಿಂದೆ ಒಪ್ಪಿಕೊಂಡಿರುವಂತೆ ತನ್ನ ಪಾಲಿನ ಹಣವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲೇ ಮೀಸಲಿರಿಸಲು ವಿನಂತಿಸಿದರು. ಈ ಮನವಿಯತ್ತಲೂ ಕೂಡಲೇ ಗಮನ ಹರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.