ಸರ್ಕಾರದ ಮಾರ್ಗಸೂಚಿಗಳಿಗೆ ಖಾಸಗಿ ಶಾಲೆಗಳ ಸಡ್ಡು
ಬೆಂಗಳೂರು, ಜು.30: ವಿಬ್ ಗಯಾರ್ ಶಾಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಳಿಕ ಗೃಹ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳು ಅಳವಡಿಸಿಕೊಳ್ಳುವುದಿಲ್ಲ ಎಂದು ಕರ್ನಾಟಕ ಖಾಸಗಿ ಶಾಲೆಗಳ ಜಂಟಿ ಕ್ರಿಯಾ ಸಮಿತಿ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಲ್.ಆರ್.ಶಿವರಾಮೇಗೌಡ, ಗೃಹ ಹಾಗೂ ಶಿಕ್ಷಣ ಇಲಾಖೆ ನಮ್ಮೊಂದಿಗೆ ಮಾತುಕತೆ ನಡೆಸದೆ ಮಾರ್ಗಸೂಚಿ ತಯಾರಿಸಿ ಅನುಸರಿಸುವಂತೆ ಅಧಿಸೂಚನೆ ಹೊರಡಿಸಿದೆ. ಇದನ್ನು ತಾವು ವಿರೋಧಿಸುವುದಾಗಿ ಹೇಳಿದ್ದಾರೆ. [ಶಾಲೆಗಳಿಗೆ ಎಂಎನ್ ರೆಡ್ಡಿರಿಂದ 'ಖಡಕ್' ಮಾರ್ಗ ಸೂಚಿ]
ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಅಳವಡಿಸಿಕೊಳ್ಳಬೇಕಾದರೆ ಶಾಲೆಗಳಿಗೆ ಸಾಕಷ್ಟು ಆರ್ಥಿಕ ಹೊರೆ ಬೀಳುತ್ತದೆ. ಮಕ್ಕಳ ಶಾಲಾ ಶುಲ್ಕವನ್ನು ಹೆಚ್ಚಿಸಬೇಕಾಗುತ್ತದೆ. ಇದರಿಂದ ಪೋಷಕರಿಗೆ ಹೊರೆಯಾಗಲಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್, ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರಿಗೆ ನಮ್ಮ ನಿರ್ಧಾರವನ್ನು ತಿಳಿಸಲಿದ್ದೇವೆ ಎಂದು ಅವರು ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಣ ನೀಡಿದರೆ ಯಾರಿಗೂ ಬೇಕಾದರೂ ಶಾಲೆ ತೆರೆಯಲು ಅನುಮತಿ ನೀಡುತ್ತಾರೆ. ವಿಬ್ ಗಯಾರ್ನವರು ಒಂದು ಶಾಲೆಗೆ ಅನುಮತಿ ಪಡೆದು ಏಳು ಶಾಲೆಗಳನ್ನು ನಡೆಸುತ್ತಿದ್ದಾರೆ. ನಾರಾಯಣ ಶಾಲೆಯವರು ಒಂದು ಶಾಲೆಗಾಗಿ ಅನುಮತಿ ಪಡೆದು 40 ಶಾಲೆಗಳನ್ನು ನಡೆಸುತ್ತಿದ್ದಾರೆ. ಇಂತಹವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಆರೋಪಿಸಿದರು.
ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಬ್ಗಯಾರ್ ಶಾಲೆಯ ಪ್ರಾಂಶುಪಾಲರು ಹಾಗೂ ಉಪಪ್ರಾಂಶುಪಾಲರನ್ನು ಏಕೆ ಬಂಧಿಸಿಲ್ಲ ಎಂದು ಎಲ್.ಆರ್.ಶಿವರಾಮೇಗೌಡ ಪ್ರಶ್ನಿಸಿದರು.