'ಎಂಇಎಸ್ ನಿಷೇಧಿಸುವವರೆಗೆ ಹೋರಾಟ ನಿಲ್ಲುವುದಿಲ್ಲ'
ಹುಬ್ಬಳ್ಳಿ/ಬೆಳಗಾವಿ, ಆ. 2 : ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿಯಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ತಡಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಧ್ವಜ ಹಾರಿಸಲು ನಮಗೆ ಯಾರ ಅಪ್ಪಣೆಯೂ ಬೇಕಾಗಿಲ್ಲ. ಇಲ್ಲೇನು ಬ್ರಿಟಿಷ್ ಆಳ್ವಿಕೆ ಇದೆಯೋ, ಪ್ರಜಾಪ್ರಭುತ್ವ ಇದೆಯೋ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿ ಮತ್ತು ಶಿವಸೇನೆಯ ಪುಂಡಾಟಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ವ್ಯಕ್ತಪಡಿಸುವ ಉದ್ದೇಶದಿಂದ ಬೆಳಗಾಳಿಗೆ ತೆರಳುತ್ತಿದ್ದಾಗ ಪೊಲೀಸರು ನಾರಾಯಣ ಗೌಡರನ್ನು ಶನಿವಾರ ಹುಬ್ಬಳ್ಳಿಯ ತಡಸ್ ಕತ್ರಿಯಲ್ಲಿ ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ಗೌಡರು ಮರಾಠಿಗರ ವಿರುದ್ಧ ಕಿಡಿಕಾರಿದ್ದಾರೆ. [ನಾರಾಯಣ ಗೌಡ ಬಂಧನ]
ಕನ್ನಡ ಹೋರಾಟಗಾರರನ್ನು ಒಂದು ದಿನ ಬಂಧಿಸಬಹುದು, ಎರಡು ದಿನ ಬಂಧಿಸಬಹುದು. 365 ದಿನ ಬಂಧಿಸಿಡಲು ಸಾಧ್ಯವೆ? ಎಂದು ಪ್ರಶ್ನಿಸಿರುವ ಅವರು, ಕರ್ನಾಟಕದಲ್ಲಿ ಕನ್ನಡ ವಿರೋಧಿ ಚಟುವಟಿಕೆ ನಡೆಸುತ್ತಿರುವ ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆಯನ್ನು ನಿಷೇಧಿಸುವವರೆಗೆ ಮತ್ತು ಕನ್ನಡ ವಿರೋಧಿಗಳನ್ನು ಬಂಧಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ, ಇದು ನಮ್ಮ ಸ್ವಾಭಿಮಾನದ ಪ್ರಶ್ನೆ ಎಂದು ಅವರು ಬಂಧನವಾದ ನಂತರ ಸುದ್ದಿಗಾರರಿಗೆ ತಿಳಿಸಿದರು.
'ಯಳ್ಳೂರು ಚಲೋ' ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬೆಳಗಾವಿ ತಲುಪುವ ಮೊದಲೇ ಬಂಧಿಸಲಾಗಿದೆ. ಶುಕ್ರವಾರದಂದು ಕರ್ನಾಟಕ ಸರಕಾರದ ಧೋರಣೆಯನ್ನು ವಿರೋಧಿಸಿ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.
ಮತ್ತೆ ಭಾಷಾ ಸಂಘರ್ಷ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಅಪರಾಧ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಪ್ರಕಾರ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಗರದಲ್ಲಿ ಯಾವುದೇ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ.
ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಸಮರ್ಥಿಸಿಕೊಂಡಿರುವ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಗುಪ್ತ ಅವರು, ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಗರ ನಡುವೆ ಸಾಮರಸ್ಯ ಸೃಷ್ಟಿಸಲು ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಎಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೆಳಗಾವಿಗೆ ಬಂದು ಸಾಮರಸ್ಯ ಕದಡುವಂಥ ಕಾರ್ಯ ನಡೆಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಆಗಸ್ಟ್ 1ರಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕೂಡ 'ಯಳ್ಳೂರು ಚಲೋ' ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿಯೇ ಪೊಲೀಸರು ಬಂಧಿಸಿದ್ದರು. ವಾಟಾಳ್ ಅವರು ಜು.31ರಂದು ಕರೆದಿದ್ದ ಬೆಂಗಳೂರು ಬಂದ್ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭಾಗಿಯಾಗಿರಲಿಲ್ಲ. ನಮ್ಮ ಪ್ರತಿಭಟನೆ ತೋರಲು ಬಂದ್ ಮಾಡುವ ಯಾವುದೇ ಅವಶ್ಯಕತೆಯಿಲ್ಲ ಎಂದು ನಾರಾಯಣ ಗೌಡರು ಒನ್ಇಂಡಿಯಾಗೆ ತಿಳಿಸಿದ್ದರು. [ಬಂದ್ ನಲ್ಲಿ ನಾರಾಯಣ ಗೌಡ ಏಕಿಲ್ಲ]