ನಿರೀಕ್ಷಿಸಿ : ಉಪ ಚುನಾವಣೆ ಫಲಿತಾಂಶ ಲೈವ್ ಅಪ್ಡೇಟ್
ಬೆಂಗಳೂರು, ಆ.24: ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷ ಬಿಜೆಪಿ ನಡುವಿನ ಪ್ರತಿಷ್ಠೆಯ ಹೋರಾಟದಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು? ಎಂಬ ಫಲಿತಾಂಶ ಸೋಮವಾರ ಹೊರ ಬೀಳಲಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳೆ ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಫಲಿತಾಂಶದ ಕ್ಷಣ ಕ್ಷಣದ ಲೈವ್ ಅಪ್ದೇಟ್ ಒನ್ ಇಂಡಿಯಾ ಕನ್ನಡ ವೆಬ್ ತಾಣ ನಿಮ್ಮ ಮುಂದಿಡಲಿದೆ.
ಚಿಕ್ಕೋಡಿ- ಸದಲಗಾ, ಶಿಕಾರಿಪುರ ಹಾಗೂ ಬಳ್ಳಾರಿ ಈ ಮೂರು ಕ್ಷೇತ್ರಗಳಿಗೆ ಆ.21 ರಂದು ಮತದಾನ ನಡೆದಿತ್ತು. ಸೋಮವಾರ(ಆ.25) ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.[ಉಪ ಚುನಾವಣೆ ಫಲಿತಾಂಶ: ಲೈವ್ ಅಪ್ದೇಟ್]
ನಾಳೆ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆಯಾ ಮತ ಎಣಿಕೆ ಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಮೂರೂ ಕ್ಷೇತ್ರಗಳಲ್ಲಿ ಒಟ್ಟು 22 ಅಭ್ಯರ್ಥಿಗಳ ಭವಿಷ್ಯ ತಿಳಿಯಲು ರಾಜ್ಯದ ಜನತೆ ಕಾತುರರಾಗಿದ್ದಾರೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ. ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಮತಎಣಿಕೆ ಚಿಕ್ಕೋಡಿಯ ಆರ್.ಡಿ.ಸಂಯುಕ್ತ ಕಿರಿಯ ಕಾಲೇಜಿನಲ್ಲಿ ನಡೆಯಲಿದೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಭರ್ಜರಿ ಮತದಾನ
ಈ ಉಪಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಶೇ.83.53ರಷ್ಟು ಮತದಾನವಾಗಿತ್ತು. ಈ ಕ್ಷೇತ್ರದಲ್ಲಿ ಸಂಸದ ಪ್ರಕಾಶ್ ಹುಕ್ಕೇರಿ ಅವರ ಪುತ್ರ ಗಣೇಶ್ ಹುಕ್ಕೇರಿ ಹಾಗೂ ಬಿಜೆಪಿಯ ಮಹಂತೇಶ್ ಕವಟಗಿ ಮಠ ಅವರ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.
ಬಳ್ಳಾರಿಯಲ್ಲಿ ಡಿಕೆಶಿ ಆಶ್ವಾಸನೆ ಕಥೆ ಏನು?
ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.30ರಷ್ಟು ಮತದಾನವಾಗಿದ್ದು ಬಿಜೆಪಿಯ ಓಬಳೇಶ್, ಹಾಗೂ ಕಾಂಗ್ರೆಸ್ಸಿನ ಎಂ.ವೈ.ಗೋಪಾಲಕೃಷ್ಣ ಅವರ ನಡುವೆ ನೇರ ಹಣಾಹಣಿ ಉಂಟಾಗಿದೆ. ಡಿಕೆ ಶಿವಕುಮಾರ್ ಅವರ ಆಶಾಸನೆಗಳ ಮಹಾಪೂರ ಕಾಂಗ್ರೆಸ್ ಅಭ್ಯರ್ಥಿ ಕೈ ಹಿಡಿಯುವುದೇ ಕಾದು ನೋಡಬೇಕಿದೆ.
ಬಿ.ವೈ.ರಾಘವೇಂದ್ರ ರಾಜಕೀಯ ಭವಿಷ್ಯ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.26ರಷ್ಟು ಮತದಾನವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಕಾಂಗ್ರೆಸ್ಸಿನ ಶಾಂತವೀರಪ್ಪ ಗೌಡ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಈ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆಯಿಂದ ಹೊರಗುಳಿದಿತ್ತು ಬಿ.ವೈ.ರಾಘವೇಂದ್ರ ರಾಜಕೀಯ ಭವಿಷ್ಯ ನಿರ್ಧರಿಸುವ ಈ ಚುನಾವಣೆ ಗೆಲ್ಲಲು ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಸುದ್ದಿಯೂ ಇದೆ
ವಿಜಯಲಕ್ಷ್ಮಿ ಯಾರಿಗೆ ಒಲಿಯುವಳೋ
ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ಮೂರೂ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಿದ್ದರು. ಸಚಿವ ಡಿಕೆ ಶಿವಕುಮಾರ್ ಅವರು ಬಳ್ಳಾರಿಯಲ್ಲೇ ಮೊಕ್ಕಾಂ ಹೂಡಿ ಕ್ಷೇತ್ರದ ಜನತೆಯ ಆಶೋತ್ತರಗಳನ್ನು ಈಡೇರಿಸುವ ಭರವಸೆ ನೀಡಿದ್ದರು.
ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಮೊದಲಾದವರು ನಿರಂತರ ಪ್ರಚಾರ ಕಾರ್ಯಕೈಗೊಂಡಿದ್ದರು.
ಬಿ.ಎಸ್.ಯಡಿಯೂರಪ್ಪ, ಪ್ರಕಾಶ್ ಹುಕ್ಕೇರಿ, ಬಿ.ಶ್ರೀರಾಮುಲು ಅವರು ಸಂಸದರಾಗಿ ಆಯ್ಕೆಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಬಿಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆಯ ಕದದಲ್ಲಿ ಅಂತಿಮವಾಗಿ ವಿಜಯಲಕ್ಷ್ಮಿ ಯಾರಿಗೆ ಒಲಿಯುವಳೋ ಕಾದು ನೋಡಬೇಕಿದೆ.