ಗೌರಿ-ಗಣೇಶ ಹಬ್ಬದ ಬಳಿಕ ಸಂಪುಟ ವಿಸ್ತರಣೆ
ಬೆಂಗಳೂರು, ಆ.27 : ಸಂಪುಟ ವಿಸ್ತರಣೆಗಾಗಿ ಕಾದು ಕುಳಿತಿದ್ದ ಶಾಸಕರಿಗೆ ಸಚಿವರಾಗುವ ಭಾಗ್ಯ ಒದಗಿ ಬಂದಿದೆ. ಗೌರಿ-ಗಣೇಶ ಹಬ್ಬದ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಸಮನ್ವಯ ಸಮತಿ ಸಭೆಯ ಬಳಿಕ ಮಾತನಾಡಿದ ಸಿಎಂ, ಗೌರಿ-ಗಣೇಶ ಹಬ್ಬದ ಬಳಿಕ ಸಚಿವ ಸಂಪುಟ ಸಭೆಯನ್ನು ವಿಸ್ತರಣೆ ಮಾಡಲಾಗುತ್ತದೆ. ಅದಕ್ಕೂ ಮೊದಲು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಾಗುವುದು ಎಂದರು.
ಸಂಪೂರ್ಣ ಸಚಿವ ಸಂಪುಟವನ್ನು ಪುನಾರಚನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ ಅವರು, ಪ್ರಸ್ತುತ ಬಾಕಿ ಇರುವ ನಾಲ್ಕು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಲಾಗುತ್ತದೆ. ಹೈಕಮಾಂಡ್ ನಾಯಕರ ಒಪ್ಪಿಗೆ ಪಡೆದು ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. [ಸಮನ್ವಯ ಸಮಿತಿ ಸಭೆಯ ಮುಖ್ಯಾಂಶಗಳು]
ಸಮನ್ವಯ ಸಮತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲು ಒಪ್ಪಿಗೆ ನೀಡಲಾಗಿದೆ. ಸಂಪುಟ ವಿಸ್ತರಣೆಗೆ ತೊಡಕಾಗಿದ್ದ ಎಲ್ಲಾ ವಿಚಾರಗಳ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಆದರೆ, ಸಚಿವ ಸಂಪುಟ ಸೇರುವ ನಾಲ್ವರು ಯಾರು? ಎಂಬ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಸಹ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದು, ಉಪಮುಖ್ಯಮಂತ್ರಿ ಹುದ್ದೆ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು, ಎಲ್ಲರೊಂದಿಗೆ ಚರ್ಚಿಸಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.