ಯಾರಿಗೆ ಒಲಿಯಲಿದೆ ಉಪಮುಖ್ಯಮಂತ್ರಿ ಹುದ್ದೆ?
ಬೆಂಗಳೂರು, ಸೆ.2 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುತ್ತಾರೆಯೇ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಆದರೆ, ಕಾಂಗ್ರೆಸ್ ನಾಯಕರು ಡಿಸಿಎಂ ಆಗಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯ ಸಂಪುಟ ವಿಸ್ತರಣೆ ಸಮಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಅಂತಿಮ ತೀರ್ಮಾನ ಹೊರಬೀಳಲಿದೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬುಧವಾರ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಇದಕ್ಕಾಗಿ 10 ಕ್ಕೂ ಹೆಚ್ಚು ಆಕಾಂಕ್ಷಿಗಳು ಲಾಬಿ ಆರಂಭಿಸಿದ್ದಾರೆ. ಇವರಲ್ಲಿ ಡಿಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿರುವವರು ಇದ್ದಾರೆ. [ಡಿಸಿಎಂ ಹುದ್ದೆ ಬೇಕೆ?, ಸ್ವಲ್ಪ ಕಾಯುವ ತಾಳ್ಮೆ ಇರಲಿ]
ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಎಲ್ಲೂ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗಿಲ್ಲ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದರೂ ಡಿಸಿಎಂ ಆಯ್ಕೆ ಮಾಡಿರಲಿಲ್ಲ. ಆದರೆ, ಈಗ ಪರಿಸ್ಥಿತಿ ಬೇರೆಯಾಗಿದೆ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಪರಮೇಶ್ವರ್ ಅವರು ಬಹಿರಂಗವಾಗಿ ಡಿಸಿಎಂ ಹುದ್ದೆ ಬೇಕು ಎಂದು ಹಲವು ಬಾರಿ ಹೇಳಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಹ ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಇತ್ತ ಸಿಎಂ ಪರಮಾಪ್ತರಾದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸಹ ಹೈಕಮಾಂಡ್ ನಾಯಕರು ಡಿಸಿಎಂ ಹುದ್ದೆಗೆ ಅರ್ಜಿ ಆಹ್ವಾನಿಸಿದರೆ ನಾನು ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ಡಿಸಿಎಂ ರೇಸ್ನಲ್ಲಿರುವ ನಾಯಕರು ಯಾರು ನೋಡೋಣ ಬನ್ನಿ...
ಪರಮೇಶ್ವರ್ ಪ್ರಬಲ ಆಕಾಂಕ್ಷಿ
ವಿಧಾನಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿ. ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಸಾಧನೆ ಪರಮೇಶ್ವರ್ ಅವರ ಶಕ್ತಿ. ಸರ್ಕಾರದಲ್ಲಿ ದಲಿತ ಜನಾಂಗಕ್ಕೆ ಪ್ರಾತಿನಿಧ್ಯ ನೀಡಿಲ್ಲ. ಆದ್ದರಿಂದ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿ ಎಂದು ಅವರ ಬೆಂಬಲಿಗರು ಹಲವಾರು ಬಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಆದ್ದರಿಂದ ಪರಮೇಶ್ವರ್ ಅವರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ನಾನು ಅರ್ಜಿ ಸಲ್ಲಿಸುತ್ತೇನೆ
ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿ ಹೈಕಮಾಂಡ್ ಅರ್ಜಿ ಆಹ್ವಾನಿಸಿದರೆ ನಾನು ಅರ್ಜಿ ಹಾಕುವುದರ ಬಗ್ಗೆ ತೀರ್ಮಾನಿಸುತ್ತೇನೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ನೀಡಿದ್ದಾರೆ. ಸಿಎಂ ಪರಮಾಪ್ತರಾಗಿರುವ ಜಯಚಂದ್ರ ಅವರ ಬಳಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಪಶುಸಂಗೋಪನೆ, ಮುಜರಾಯಿ ಖಾತೆಗಳಿವೆ. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಸಹ ಹೌದು. ಆದ್ದರಿಂದ ಸಿಎಂ ಇವರನ್ನು ಡಿಸಿಎಂ ಮಾಡಬಹುದು ಎಂಬ ಲೆಕ್ಕಾಚಾರಗಳಿವೆ.
ಡಿಕೆ ಶಿವಕುಮಾರ್ ಅವರ ಹೆಸರು ಇದೆ
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಉಪ ಮುಖ್ಯಮಂತ್ರಿಗಳ ಪಟ್ಟಿಯಲ್ಲಿದೆ. ಪ್ರಬಲ ಒಕ್ಕಲಿಗೆ ಜನಾಂಗಕ್ಕೆ ಸೇರಿದ ಡಿ.ಕೆ.ಶಿವಕುಮಾರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸಹೋದರನನ್ನು ಗೆಲ್ಲಿಸಿದ ಕೀರ್ತಿ ಮತ್ತು ಬಳ್ಳಾರಿಯಲ್ಲಿ ರೆಡ್ಡಿಗಳ ಕೋಟೆಮೇಲೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಾಧನೆಯೂ ಜೊತೆಗಿದೆ. ಆದರೆ, 'ನಾನೊಬ್ಬ ಶಿಸ್ತಿನ ಕಾಂಗ್ರೆಸ್ ಕಾರ್ಯಕರ್ತ. ಅಧಿಕಾರ, ಹುದ್ದೆ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಕೆಲವು ದಿನಗಳ ಹಿಂದೆ ಅವರು ಹೇಳಿದ್ದಾರೆ.
ದಿಗ್ವಿಜಯ್ ಸಿಂಗ್ ಹೇಳುವುದೇನು?
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಡಿಸಿಎಂ ಹುದ್ದೆ ಸೃಷ್ಟಿ ವಿಚಾರದಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಆದ್ದರಿಂದ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳಬೇಕು.
ಮುಖ್ಯಮಂತ್ರಿಗಳು ಹೇಳುವುದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಿಲ್ಲ ಎಂದು ಹೇಳುತ್ತಾ ಬಂದಿದ್ದಾರೆ. ಪರಮೇಶ್ವರ್ ಅವರಿಗೆ ಸಹ ಸಿಎಂ ಪ್ರಮುಖ ಖಾತೆಯೊಂದನ್ನು ನೀಡುವ ಕುರಿತು ಚಿಂತನೆ ನಡೆಸಿದ್ದು, ಡಿಸಿಎಂ ಹುದ್ದೆ ಸೃಷ್ಟಿ ಮಾಡದಿರಲು ಚಿಂತನೆ ನಡೆಸಿದ್ದಾರೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ದೆಹಲಿಗೆ ಹೋಗಿ ಬಂದ ನಂತರ ಪ್ರಕಟವಾಗಲಿದೆ.