ಎತ್ತಿನಹೊಳೆ ಯೋಜನೆ ಈಗಾಗಲೇ ಆರಂಭವಾಗಿದೆ
ಬೆಂಗಳೂರು, ಮೇ 31: ಮೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಭಾಗೀರಥಿಯಾಗಲಿರುವ ಎತ್ತಿನಹೊಳೆ ಯೋಜನೆ ಈಗಾಗಲೇ ಆರಂಭವಾಗಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ (ಮೇ 31) ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಮೊಯ್ಲಿ, ನಾನು ಶಂಕುಸ್ಥಾಪನೆ ಮಾಡಿದ್ದ ಎಲ್ಲಾ ಕಾಮಗಾರಿಗಳು ಮುಂದಿನ ದಿನಗಳಲ್ಲಿ ಪೂರ್ಣಗೊಳ್ಲಲಿದೆ ಎನ್ನುವ ಭರವಸೆಯನ್ನು ವ್ಯಕ್ತ ಪಡಿಸಿದರು.
ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಜನರಿಗೆ ದಶಕಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಎತ್ತಿನಹೊಳೆ ಯೋಜನೆ ಸಹಕಾರಿಯಾಗಲಿದೆ ಎಂದು ಮೊಯ್ಲಿ ಹೇಳಿದ್ದಾರೆ.
ಈ ಯೋಜನೆ ಈಗಾಗಲೇ ಕಾರ್ಯಾರಂಭವಾಗಿದ್ದು, ಈ ಭಾಗದ ಜನರಿಗೆ ಈ ಯೋಜನೆಯ ಮೂಲಕ ಶಾಸ್ವತ ಪರಿಹಾರ ನೀಡಲಾಗುವುದು. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಯೋಜನೆಯ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಮೊಯ್ಲಿ ಹೇಳಿದ್ದಾರೆ.
ಚುನಾವಣೆಯ ಸಂದರ್ಭದಲ್ಲೂ ಮತ್ತು ಚುನಾವಣೆಯ ನಂತರವೂ ಈ ಯೋಜನೆಯ ಮೂಲಕ ರಾಜಕೀಯ ಲಾಭ ಪಡೆಯುವ ಉದ್ದೇಶ ನನಗಿಲ್ಲ ಎಂದು ಮೊಯ್ಲಿ ಹೇಳಿದ್ದಾರೆ.
ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಮೊಯ್ಲಿಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.