ಕೆಜೆಪಿಗೆ ಗುಡ್ ಬೈ ಹೇಳಿದ ಮೋಹನ್ ಲಿಂಬಿಕಾಯಿ
ಸೋಮವಾರ ಸಂಜೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೋಹನ್ ಲಿಂಬಿಕಾಯಿ, ಕರ್ನಾಟಕ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಕಾರ್ಯಕಾರಿಣಿ ಸಮಿತಿಗೆ ರಾಜೀನಾಮೆ ನೀಡಿದ್ದೇನೆ, ಶೀಘ್ರವೇ ಮಾತೃಪಕ್ಷ ಬಿಜೆಪಿಗೆ ಮರಳುತ್ತೇನೆ ಎಂದು ಹೇಳಿದರು.
ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಇ-ಮೇಲ್ ಹಾಗೂ ಅಂಚೆ ಮುಖಾಂತರ ರಾಜೀನಾಮೆ ಸಲ್ಲಿಸಿದ್ದೇನೆ. ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡಲು ಬಿಜೆಪಿಗೆ ಬೆಂಬಲ ನೀಡುತ್ತಿದ್ದೇನೆ, ವಾರದೊಳಗೆ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಅವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾಗಿದ್ದ ಮೋಹನ್ ಲಿಂಬಿಕಾಯಿ 2013ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದಿದ್ದರು. ಯಡಿಯೂರಪ್ಪ ಪರಮಾಪ್ತರಾಗಿದ್ದ ಅವರು ಪರಿಷತ್ ಸದಸ್ಯತ್ವದ 15 ತಿಂಗಳ ಅವಧಿ ಬಾಕಿ ಇರುವಾಗಲೇ ರಾಜೀನಾಮೆ ನೀಡಿ ಕೆಜೆಪಿ ಪಕ್ಷ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
2008ರಲ್ಲಿ ವಾಯುವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇವರು, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಅವರನ್ನು ಸೋಲಿಸಿ ಪರಿಷತ್ ಗೆ ಆಯ್ಕೆಯಾಗಿದ್ದರು. ಮೊದಲಿನಿಂದಲೂ ಯಡಿಯೂರಪ್ಪ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಸದ್ಯ ಮಾತೃ ಪಕ್ಷಕ್ಕೆ ಮರಳಲಿದ್ದಾರೆ. (ಬಿಜೆಪಿಗೆ ಮೋಹನ್ ಲಿಂಬಿಕಾಯಿ ರಾಜೀನಾಮೆ)
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳುತ್ತಾರೋ ಇಲ್ಲವೋ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಆದರೆ, ಅವರ ಬೆಂಬಲಿಗರು ಮಾತೃಪಕ್ಷಕ್ಕೆ ಮರಳಲು ಪ್ರಾರಂಭಿಸಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉಳಿದ ನಾಯಕರು ಬಿಜೆಪಿಗೆ ಮರಳುತ್ತಾರೋ? ಕಾದು ನೋಡಬೇಕು