ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಅತ್ಯಾಚಾರ ಪ್ರಕರಣ
ಬೆಂಗಳೂರು, ಜು. 23 : ಕರ್ನಾಟಕದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ಬಗ್ಗೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ. ಅತ್ಯಾಚಾರ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಬಿಜೆಪಿ ಸದಸ್ಯರು ಸದನದಲ್ಲಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಕಾಲ ಗೊಂದಲ ಉಂಟಾಗಿತ್ತು.
ಮಂಗಳವಾರದ ಕಲಾಪದ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೆಂಗಳೂರು ಸೆಂಟ್ರಲ್ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ವಿಷಯ ಪ್ರಸ್ತಾಪಿಸಿದರು. ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು. [ಅತ್ಯಾಚಾರ ಪ್ರಕರಣಗಳು]
ವಿಷಯ ಪ್ರಸ್ತಾಪಿಸಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಕರ್ನಾಟಕದಲ್ಲಿ ಸರ್ಕಾರವೇ ಇಲ್ಲದೆ ಅತ್ಯಾಚಾರಿಗಳ ಸ್ವರ್ಗವಾಗಿದೆ ಎಂದು ಗುಡುಗಿದರು. ಚಾಮರಾಜನಗರ ಕ್ಷೇತ್ರದ ಸಂಸದ ಧ್ರುವನಾರಾಯಣ ಅವರು ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. [ನಿಮಗೆ ರೇಪ್ ಬಿಟ್ರೆ ಬೇರೆ ವಿಷಯ ಇಲ್ವಾ?]
ಬೆಂಗಳೂರಿನಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರು ನಡೆಸಿದ ಅತ್ಯಾಚಾರ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪಿಸಿದ ಶೋಭಾ ಕರಂದ್ಲಾಜೆ, ಶಾಲೆಯ ಸ್ಕೇಟಿಂಗ್ ತರಬೇತುದಾರನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜವಾಬ್ದಾರಿ ನಮ್ಮದಲ್ಲ ಎಂದು ಬೇಜವಾಬ್ದಾರಿಯಿಂದ ವರ್ತಿಸಿದೆ ಎಂದರು.
ನಂತರ ಮಾತನಾಡಿದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದರಿಂದ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಹಲವು ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯರಾದ ಪ್ರತಾಪ್ ಸಿಂಹ ಮುಂತಾದವರು ಮೋಹನ್ ಅವರನ್ನು ಬೆಂಬಲಿಸಿದರು.
ಸ್ಪೀಕರ್ ಸ್ಥಾನದಲ್ಲಿದ್ದ ಎಂ.ತಂಬಿದೊರೈ ಅವರು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ ರಾಜ್ಯ ಸರ್ಕಾರಕ್ಕೆ ಸೇರಿದ್ದು ಎಂದು ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ. ಬೇರೊಬ್ಬ ಸದಸ್ಯರು ಮಾತನಾಡಲು ನಿಂತಾಗಲೂ ಶೋಭಾ, ಮೋಹನ್ ರಾಜ್ಯ ಸರ್ಕಾರದ ವಿರುದ್ಧ ದೂರುತ್ತಲೇ ಇದ್ದರು.