ಸಿದ್ದರಾಮಯ್ಯ ಸಲಹೆಗಾರರಾಗಿ ಕೆಂಪಯ್ಯ ನೇಮಕ?
ಸಿಎಂ ಸಿದ್ದರಾಮಯ್ಯ ಅವರಿಗೆ ಕೆಂಪಯ್ಯ ಅವರು ಪರಮಾಪ್ತರಾಗಿದ್ದು, ಅವರಿಗೆ ಸರ್ಕಾರದಲ್ಲಿ ಹುದ್ದೆ ನೀಡುವ ಕುರಿತು ಹಿಂದೆಯೇ ಚರ್ಚೆ ನಡೆದಿತ್ತು. ಸದ್ಯ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಕುರಿತು ಕಡತ ಸಿದ್ಧವಾಗಿದ್ದು, ಸಿಎಂ ಸಹಿ ಮಾತ್ರ ಬಾಕಿ ಇದೆ ಎಂದು ತಿಳಿದುಬಂದಿದೆ.
ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ, ಆಂತರಿಕ ಭದ್ರತೆ, ಗುಪ್ತದಳಕ್ಕೆ ಸಂಬಂಧಿಸಿದಂತೆ ಸಲಹೆಗಾರರನ್ನಾಗಿ ನೇಮಿಸಿದರೆ, ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ದೊರೆಯಲಿದೆ. ಆದರೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಗಳ ಈ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. [ಸಿಎಂ ಸಿದ್ದು ಆಪ್ತರಾಗಿರುವ ಕೆಂಪಯ್ಯ]
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ನಂತರ ನಡೆದ ಪೊಲೀಸರ ವರ್ಗಾವಣೆಯಲ್ಲಿ ಕೆಂಪಯ್ಯ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪಗಳಿವೆ. ಆದ್ದರಿಂದ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲು ಸಚಿವರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲ : ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಮುಖ್ಯಮಂತ್ರಿಗಳು ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಸಂಬಂಧ ತಮಗೆ ಯಾವುದೇ ಮಾಹಿತಿ ಇಲ್ಲ, ಸಚಿವ ಸಂಪುಟ ಸಭೆಯಲ್ಲೂ ಈ ಕುರಿತು ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.