ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ
ಬೆಂಗಳೂರು, ಜೂ. 25 : ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಪ್ರಮುಖ ಪ್ರತಿಪಕ್ಷ ಬಿಜೆಪಿ ಹಾಗೂ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ತಲಾ ಒಂದು ಸ್ಥಾನ ಗಳಿಗೆ ತೃಪ್ತಿಪಟ್ಟುಕೊಂಡಿವೆ.
ಎರಡು ಪದವೀಧರ, ಎರಡು ಶಿಕ್ಷಕರ ಕ್ಷೇತ್ರಕ್ಕೆ ಜೂ.20ರಂದು ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪುಟ್ಟಣ್ಣ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶರಣಪ್ಪ ಮಟ್ಟೂರ ಜಯಗಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ 17 ಸ್ಥಾನಗಳನ್ನು ಗಳಿಸಿದ್ದ ಕರ್ನಾಟಕ ಬಿಜೆಪಿ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದು, ನಾಲ್ಕು ಸ್ಥಾನಗಳಲ್ಲಿ ಒಂದಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಶಿವಯೋಗಿ ಸ್ವಾಮಿ, ಶಶೀಲ್ ನಮೋಶಿ ಅವರು ಸೋಲು ಅನುಭವಿಸಿದ್ದು, ಬಿಜೆಪಿಯ ಎಸ್.ವಿ.ಸುಂಕನೂರು ಮಾತ್ರ ಜಯಗಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಮಾತ್ರ ಗಳಿಸಿದ ಜೆಡಿಎಸ್ ಪಕ್ಷ ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆ ವ್ಯಾಪ್ತಿ ಹೊಂದಿರುವ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಪ್ರತಿಪಕ್ಷ ಬಿಜೆಪಿ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಒಂದು ಸ್ಥಾನಗಳನ್ನು ಹಂಚಿಕೊಂಡಿವೆ. ಪಡೆದ ಮತಗಳ ವಿವರ ಇಲ್ಲಿದೆ.
ಹ್ಯಾಟ್ರಿಕ್ ಗೆಲುವು ಸಾಧಿಸಿದ ಪುಟ್ಟಣ್ಣ
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪುಟ್ಟಣ್ಣ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಪುಟ್ಟಣ್ಣ ಅವರು 8,531 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿ ಎಂ. ನೀಲಯ್ಯ 5,531 ಮತಗಳನ್ನು ಪಡೆದು ಎರಡನೇ ಸ್ಥಾನಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ವೆಂಕಟೇಶ್ 114 ಮತಗಳನ್ನು ಪಡೆದರೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಗುರುರಾಜ ಕರ್ಜಗಿ 1456 ಮತಗಳನ್ನು ಪಡೆದಿದ್ದಾರೆ.
ಕಾಂಗ್ರೆಸ್ ಗೆ ಒಲಿದ ಈಶಾನ್ಯ ಶಿಕ್ಷಕರ ಕ್ಷೇತ್ರ
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿ ಅವರಿಗೆ ಸೋಲಿನ ರುಚಿ ತೋರಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಸಾಧಿಸಿದ್ದಾರೆ. ಮಟ್ಟೂರು ಅವರು 9,022 ಮತಗಳನ್ನು ಪಡೆದು ಜಯಗಳಿಸಿದರು. ಶಶೀಲ್ ನಮೋಶಿ ಅವರು 6,933 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಜೆಡಿಎಸ್ ಅಭ್ಯರ್ಥಿ ಎಂ.ಬಿ. ಅಂಬಲಗಿ 953 ಮತಗಳನ್ನು ಪಡೆದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಿಂಗರಾಜ ಬಿರಾದಾರ್ 766 ಮತಗಳನ್ನು ಪಡೆದಿದ್ದಾರೆ.
ಬಸವರಾಜ್ ಹೊರಟ್ಟಿ ಪುತ್ರನಿಗೆ ಸೋಲು
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರು ಅವರು ಬಸವರಾಜ ಹೊರಟ್ಟಿ ಪುತ್ರನಿಗೆ ಸೋಲಿನ ರುಚಿ ತೋರಿಸಿ ವಿಧಾನಪರಿಷತ್ ಪ್ರವೇಶಿಸಿದ್ದಾರೆ. ಎಸ್.ವಿ. ಸಂಕನೂರ ಅವರು 22,506 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ವಸಂತ ಹೊರಟ್ಟಿ ಅವರು 8,574 ಮತಗಳನ್ನು ಪಡೆದರು. ಕಾಂಗ್ರೆಸ್ ಅಭ್ಯರ್ಥಿ ಪಿ.ಎಚ್. ನೀರಲಕೇರಿ 4,685 ಮತ್ತು ಪಕ್ಷೇತರ ಅಭ್ಯರ್ಥಿ ರವಿಕುಮಾರ್ ಬಸವರಾಜ ಅಸೂತಿ 734 ಮತಗಳನ್ನು ಪಡೆದರು.
ಬಿಜೆಪಿಯ ಶಿವಯೋಗಿ ಸ್ವಾಮಿಗೆ ಸೋಲು
ಆಗ್ನೇಯ ಪದವೀಧರ ಕ್ಷೇತ್ರವನ್ನು ಜೆಡಿಎಸ್ ಕೈವಶ ಮಾಡಿಕೊಂಡಿದೆ. ಮತ ಎಣಿಕೆ ಅಂತ್ಯಗೊಂಡಾಗ ಬಿಜೆಪಿಯ ಶಿವಯೋಗಿ ಸ್ವಾಮಿ ಅವರು 15,454 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಅವರು 20,807 ಮತಗಳನ್ನು ಗಳಿಸಿ ಗೆಲುವು ಸಾಧಿಸಿದರು.