ಉಪ ಚುನಾವಣೆ ಫಲಿತಾಂಶ : ಯಾರು, ಏನು ಹೇಳಿದರು?
ಬೆಂಗಳೂರು, ಆ.23 : ಮೂರು ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಚಿಕ್ಕೋಡಿ-ಸದಲಗಾ ಮತ್ತು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದರೆ, ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟಗೊಂಡ ಬಳಿಕ ನಾಯಕರು ನೀಡಿದ ಪ್ರತಿಕ್ರಿಯೆಗಳು ಇಲ್ಲಿವೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ಶ್ರೀರಾಮುಲು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರೆ, ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ನಿರೀಕ್ಷಿತ ಗೆಲುವು ದೊರಕಲಿಲ್ಲ ಎಂದು ಫಲಿತಾಂಶವನ್ನು ವಿಶ್ಲೇಷಿಸಿದ್ದಾರೆ. [ಉಪ ಚುನಾವಣೆ ಫಲಿತಾಂಶ ಇಲ್ಲಿದೆ ನೋಡಿ]
ಫಲಿತಾಂಶದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ನಾವು ಜಯಗಳಿಸುತ್ತೇವೆ ಎಂದು ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿಯ ಭಾರೀ ಅಂತರದ ಗೆಲುವನ್ನು ನಾವು ಕಡಿಮೆ ಮಾಡಿದ್ದೇವೆ ಎಂದು ತಿಳಿಸಿದರು.
ನಿರೀಕ್ಷೆಗೂ ಮೀರಿದ ಅಂತರದಿಂದ ಗೆದ್ದಿದ್ದೇವೆ
ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನರು ಬೇರೆ-ಬೇರೆ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದಕ್ಕೆ ಚುನಾವಣೆ ಸಾಕ್ಷಿಯಾಗಿದೆ. ಬಳ್ಳಾರಿಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ನಾವು ಜಯಗಳಿಸಿದ್ದೇವೆ. ಫಲಿತಾಂಶ ಜನರು ಕಾಂಗ್ರೆಸ್ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.
ಸ್ಥಳೀಯ ವಿಷಯಕ್ಕೆ ಆದ್ಯತೆ ನೀಡಿದ್ದಾರೆ
ವಿಧಾನಸಭೆ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಅವರು, ಸ್ಥಳೀಯ ವಿಷಯಗಳ ಮೇಲೆ ವಿಧಾನಸಭೆ ಚುನಾವಣೆ ನಡೆಯುತ್ತದೆ. ರಾಜ್ಯದಲ್ಲಿರುವ ಸರ್ಕಾರದ ಪರವಾಗಿ ಅವರು ಮತ ಚಲಾಯಿಸುತ್ತಾರೆ ಎಂದು ಹೇಳಿದ್ದಾರೆ.
ಫಲಿತಾಂಶ ಸಮಾಧಾನ ತಂದಿಲ್ಲ
ಶಿಕಾರಿಪುರ ಕ್ಷೇತ್ರದಲ್ಲಿನ ಫಲಿತಾಂಶ ಸಮಾಧಾನ ತಂದಿಲ್ಲ. ಆದರೆ, ಸಾವಿರಾರು ಕಾರ್ಯಕರ್ತರ ಶ್ರಮದಿಂದ ನಾವು ಜಯಗಳಿಸಿದ್ದೇವೆ ಎಂದು ಮಾಜಿ ಸಿಎಂ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರು ಎಂದೂ ನಮ್ಮ ಕೈ ಬಿಟ್ಟಿಲ್ಲ, ಅವರ ನಂಬಿಕೆಯನ್ನು ನಾವು ಉಳಿಸಿಕೊಂಡು ಬಂದಿದ್ದೇವೆ. ಗೆಲುವಿನ ಅಂತರ ನಿರೀಕ್ಷೆಗಿಂತ ಕಡಿಮೆ ಆಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ನಮ್ಮ ಮುಂದಿನ ಹೋರಾಟ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಎರಡು ದಿನ ಮಾಡಿದ್ದೇನು?
ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯ ಶಿಕಾರಿಪುರದಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇನೆ ಎಂದು ಎರಡು ದಿನ ಇದ್ದು ಹೋದರು ಅವರು ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ. ಬಳ್ಳಾರಿ ಮತ್ತು ಚಿಕ್ಕೋಡಿಯಲ್ಲಿ ಬಿಜೆಪಿ ಅಂತಹ ಶಕ್ತಿ ಹೊಂದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ.
ಹಣಬಲದಿಂದ ಗೆಲುವು ಸಾಧಿಸಿದೆ
ಬಳ್ಳಾರಿಯಲ್ಲಿ ಕಾಂಗ್ರೆಸ್ ಹಣ ಮತ್ತು ತೋಳ್ಬಲದಿಂದಾಗಿ ಗೆಲುವು ಸಾಧಿಸಿದೆ. ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಹೇಳಿರುವ ಸಂಸದ ಬಿ.ಶ್ರೀರಾಮುಲು ಅವರು, ಕಾಂಗ್ರೆಸ್ ಪಕ್ಷದ ಚುನಾವಣೆ ವೇಳೆ ಕ್ಷೇತ್ರದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒಗ್ಗಟ್ಟಾಗಿ ಕೆಲಸ ಮಾಡಿ ಗೆದ್ದಿದ್ದೇವೆ
ಬಳ್ಳಾರಿ ಕಾಂಗ್ರೆಸ್ನಲ್ಲಿನ ಸಣ್ಣ-ಪುಟ್ಟ ಅಸಮಾಧಾನಗಳ ನಡುವೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದ್ದೇವೆ. ನಾವು ಪ್ರಭಾವಿಗಳಲ್ಲದಿದ್ದರೂ ಜನರು ನಮಗೆ ಬೆಂಬಲ ನೀಡಿದ್ದಾರೆ ಎಂದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಜಯಗಳಿಸಿದ ಎನ್.ವೈ.ಗೋಪಾಲಕೃಷ್ಣ ಹೇಳಿದ್ದಾರೆ. ಕುಡಿಯುವ ನೀರು, ರಸ್ತೆ, ನೀರಾವರಿ ಯೋಜನೆಗಳು ವಿಫಲವಾಗಿದೆ ಅವುಗಳನ್ನು ಪೂರ್ಣಗೊಳಿಸುವುದು ನನ್ನ ಆದ್ಯತೆ ಎಂದು ತಿಳಿಸಿದ್ದಾರೆ.
ಕಾರ್ಯಕರ್ತರ, ನಾಯಕರ ಶ್ರಮ ಕಾರಣ
ಬಳ್ಳಾರಿ ಮತ್ತು ಚಿಕ್ಕೋಡಿ ಕ್ಷೇತ್ರದಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಬಳ್ಳಾರಿಯಲ್ಲಿ ನಿರೀಕ್ಷೆಗೂ ಮೀರಿ ಜಯಗಳಿಸಿದ್ದೇವೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಕಾರ್ಯಕರ್ತರ ಒಗ್ಗಟ್ಟು, ಶ್ರಮದಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರ ಎದುರು ಅಲ್ಪ ಮತಗಳ ಅಂತರದಿಂದ ಸೋತಿದ್ದೇವೆ ಮುಂದಿನ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.