ಕೆಪಿಎಸ್ಸಿ ವಿವಾದ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಆ.8 : 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯನ್ನು ರದ್ದುಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ವಿರೋಧಿಸಿ ಅಭ್ಯರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರತಿಪಕ್ಷಗಳು ಸಹ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿವೆ.
ಸರ್ಕಾರ ಕೆಪಿಎಸ್ಸಿ ನೇಮಕಾತಿ ರದ್ದು ಆದೇಶ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸರ್ಕಾರ ಆದೇಶ ಹಿಂಪಡೆಯದಿದ್ದರೆ, ಅಭ್ಯರ್ಥಿಗಳ ಜೊತೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ. ಪ್ರತಿಪಕ್ಷ ಬಿಜೆಪಿ ಸಹ ಸರ್ಕಾರದ ನಿರ್ಧಾರವನ್ನು ವಿರೋಧಿಸಿದೆ. [ಕೆಪಿಎಸ್ಸಿ ನೇಮಕಾತಿ ರದ್ದು]
ಸಚಿವ ಸಂಪುಟ ಸಭೆಯ ತೀರ್ಮಾನವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ. ಸರ್ಕಾರ ಭ್ರಷ್ಟರನ್ನು ಸಹಿಸಿಕೊಂಡು ಸುಮ್ಮನಿರಬೇಕೆ? ಎಂದು ಸಿಎಂ ಪ್ರಶ್ನಿಸಿದ್ದಾರೆ. ಪ್ರತಿಪಕ್ಷಗಳು ಈ ವಿಚಾರದಲ್ಲಿ ವಿನಾಃ ಕಾರಣ ರಾಜಕೀಯ ಮಾಡುತ್ತಿವೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ. ನೇಮಕಾತಿಯನ್ನು ರದ್ದುಗೊಳಿಸುವ ಮೂಲಕ ಕೆಪಿಎಸ್ಸಿಯಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಪಕ್ಷ ತಿಳಿಸಿದೆ. ಯಾರು ಏನು ಹೇಳಿದರು ಇಲ್ಲಿದೆ ನೋಡಿ
ಕಾನೂನು ಸಚಿವರು ಏನು ಹೇಳಿದರು
ಸರ್ಕಾರದ ತೀರ್ಮಾನದ ಬಗ್ಗೆ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ ಹೊಸದಾಗಿ ನಡೆಯುವ ಪರೀಕ್ಷೆ ಹಾಗೂ ಸಂದರ್ಶನ ಪ್ರಕ್ರಿಯೆಯು ಯುಪಿಎಸ್ಸಿ ಮಾದರಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಡೆಡ್ ಲೈನ್
ಸರ್ಕಾರ ಕೆಪಿಎಸ್ಸಿ ನೇಮಕಾತಿ ರದ್ದು ಆದೇಶ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಸರ್ಕಾರ ಆದೇಶ ಹಿಂಪಡೆಯುವ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಡೆಡ್ ಲೈನ್ ನೀಡಿದ್ದಾರೆ. ಇಲ್ಲವಾದಲ್ಲಿ ಅಭ್ಯರ್ಥಿಗಳ ಜೊತೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬಿಜೆಪಿ ಹೇಳುವುದೇನು?
ಪ್ರತಿಪಕ್ಷ ಬಿಜೆಪಿ ಸಹ ನೇಮಕಾತಿ ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ವಿರೋಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಸಿ.ಟಿ.ರವಿ, ಇದೊಂದು ವಿವೇಚನಾರಹಿತ ನಿರ್ಧಾರ. ಅಹಿಂದ ಹೆಸರಿನಲ್ಲಿ ರಾಜಕಾರಣ ಮಾಡುವ ಸಿದ್ದರಾಮಯ್ಯ ಅಹಿಂದ ವರ್ಗದ ಅಭ್ಯರ್ಥಿಗಳೇ ಹೆಚ್ಚಿರುವ ಪಟ್ಟಿಯನ್ನು ರದ್ದು ಮಾಡುವ ಮೂಲಕ ಅಹಿಂದ ವರ್ಗದ ಜನರ ಬೆನ್ನಿಗೆ ಚೂರಿ ಹಾಕಿದೆ ಎಂದು ಹೇಳಿದ್ದಾರೆ.
ನಿರ್ಧಾರ ಸ್ವಾಗತಿಸಿದ ಆಮ್ ಆದ್ಮಿ ಪಕ್ಷ
ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ. ಸರ್ಕಾರದ ಈ ಕ್ರಮದಿಂದ ಅರ್ಹರಾಗಿರುವ ಮತ್ತು ಯಾವುದೇ ರೀತಿಯ ಅಕ್ರಮ ಮಾಡದಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವುದು ನಿಜ. ಆದರೆ, ರಾಜ್ಯದ ಸಮಷ್ಟಿಯ ದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಕ್ರಮ ಸರಿಯಾದುದು ಮತ್ತು ನೈತಿಕವಾದದ್ದು ಎಂದು ಪಕ್ಷವು ಭಾವಿಸುತ್ತದೆ ಎಂದು ಸ್ಪಷ್ಟನೆ ನೀಡಿದೆ.
ಸರ್ಕಾರದ ಕ್ರಮ ಸರಿಯಾಗಿದೆ
ಕೆಪಿಎಸ್ಸಿ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಪಟ್ಟಿಯನ್ನು ರದ್ದು ಪಡಿಸಿರುವ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರಶೇಖರ್ ಹೇಳಿದ್ದಾರೆ. ಸರ್ಕಾರದ ನಿರ್ಧಾರದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರಬಹುದು ಆದರೆ, ಭ್ರಷ್ಟಾಚಾರದ ವಿರುದ್ಧ ಕೈಗೊಂಡಿರುವ ಈ ಕ್ರಮ ಸರಿಯಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಹೇಳುವುದೇನು?
ಕೆಪಿಎಸ್ಸಿ ನೇಮಕಾತಿ ರದ್ದುಗೊಳಿಸಿರುವ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರ ಭ್ರಷ್ಟರನ್ನು ಒಪ್ಪಿಕೊಂಡು ಸುಮ್ಮನಿರಬೇಕಾ?, ಪ್ರತಿಪಕ್ಷಗಳು ವಿನಾಕಾರಣ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿವೆ. ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಹೇಳಿದ್ದಾರೆ.