ಮಂಗಳೂರು ಪತ್ರಕರ್ತರ ಸಂಘದಿಂದ ವನಮಹೋತ್ಸವ
ಮಂಗಳೂರು, ಜು.25: ಮಂಗಳೂರು ನಗರದಲ್ಲಿ ಕಾಂಕ್ರೀಟೀಕರಣದ ಜತೆ ಹಸೀರಿಕರಣ ಕೂಡಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಿಕೆ ಆಡಳಿತ ಹಸಿರು ಮಂಗಳೂರು' ಯೋಜನೆ ಹಮ್ಮಿಕೊಂಡಿದೆ ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಮಂಗಳೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಗರದ ಲೇಡಿಹಿಲ್ನ ಪತ್ರಿಕಾ ಭವನದ ಮುಂಭಾಗದಲ್ಲಿ ಶುಕ್ರವಾರ ನಡೆದ ವನಮಹೋತ್ಸವಕ್ಕೆ ಅವರು ಚಾಲನೆ ನೀಡಿದರು.
ಪಾರ್ಕ್ ಮತ್ತು ಮೈದಾನಗಳ ಅಭಿವೃದ್ದಿಗಾಗಿ ಪಾಲಿಕೆಯಲ್ಲಿ ಪ್ರತ್ಯೇಕ ನಿಧಿ ಇದೆ. ಅರಣ್ಯ, ತೋಟಗಾರಿಕಾ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಸಿರು ಮಂಗಳೂರು' ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಡಿ ನಗರದಲ್ಲಿ ಸ್ಥಳಾವಕಾಶ ಇರುವ ಎಲ್ಲ ಜಾಗಗಳಲ್ಲಿ ಸಸಿ ನೆಡಲಾಗುವುದು. ಯೋಜನೆಯನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಆಯಾ ಜಾಗಕ್ಕೆ ಸೂಕ್ತವಾದ ಗಿಡ ನೆಡುವ ಬಗ್ಗೆ ಸಲಹೆ ನೀಡಲಿದೆ ಎಂದು ಅವರು ತಿಳಿಸಿದರು.
ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂಜಯ ಬಿಜೂರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಓ. ಪಾಲಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಬ್ಬಾಸ್, ಮಂಗಳೂರು ವಲಯ ಅರಣ್ಯ ಅಧಿಕಾರಿ ಕ್ಲಿಫರ್ಡ್ ಲೋಬೊ, ಪಾಲಿಕೆಯ ಪರಿಸರ ವಿಭಾಗದ ಎಂಜನಿಯರ್ ವಿ. ಮಧು ಮುಖ್ಯ ಅತಿಥಿಗಳಾಗಿದ್ದರು. ಪ್ರೆಸ್ಕ್ಲಬ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಇಂದಾಜೆ ವಂದಿಸಿದರು.