ಜೂನ್ 4ಕ್ಕೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಜಯಂತಿ
ಮೈಸೂರು, ಮೇ 30: 'ಆಧುನಿಕ ಮೈಸೂರಿನ ಶಿಲ್ಪಿ' ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಜೂನ್ ೪ ರಂದು ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಅರ್ಚನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗುರುವಾರ ನಿರ್ಧರಿಸಲಾಗಿದೆ. (ಬೆಂಗಳೂರು ಅರಮನೆಯಲ್ಲಿ ಜೂನ್4, 1884ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನನ)
ಮೈಸೂರು ನಗರದ ಕೆಆರ್ ವೃತ್ತದಲ್ಲಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿಗೆ ಅಂದು ಬೆಳಗ್ಗೆ 10 ಗಂಟೆಗೆ ಮಾರ್ಲಾಪಣೆ ಮಾಡಲಾಗುವುದು. ನಂತರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಲಂಕೃತ ಭಾವಚಿತ್ರದೊಂದಿಗೆ ವಿವಿಧ ಜಾನಪದ ಕಲಾ ತಂಡಗಳು ಸಂಘ ಸಂಸ್ಥೆಗಳ ಜೊತೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವುದು. ನಗರದ ಕಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭಗೊಳ್ಳುವುದು. (ನಾಲ್ವಡಿ ಕೃಷ್ಣರಾಜ ಒಡೆಯರ್ ವ್ಯಕ್ತಿಚಿತ್ರ ಓದಲು ಇಲ್ಲಿ ಕ್ಲಿಕ್ಕಿಸಿ)
ನಂತರ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಿಂದ ನಾಲ್ವಡಿ ಅವರನ್ನು ಕುರಿತ ಉಪನ್ಯಾಸ ಆಯೋಜಿಸಲಾಗುವುದು. ಅಂದು ಮಧ್ಯಾಹ್ನ 3 ಗಂಟೆಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತ ಕೀರ್ತನೆ ನೃತ್ಯರೂಪಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಆಧುನಿಕ ಮೈಸೂರಿನ ಶಿಲ್ಪಿ ಎಂದೇ ಹೆಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯಲ್ಲಿ ಸಮಾಜದ ಎಲ್ಲ ವರ್ಗದವರೂ ಭಾಗವಹಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು. ಸರ್ಕಾರಿ ನೌಕರರು ಕಡ್ಡಾಯವಾಗಿ ಸಮಾರಂಭದಲ್ಲಿ ಭಾಗವಹಿಸಬೇಕೆಂದು ತಿಳಿಸಲಾಗಿದೆ.
ಸಾಂಸ್ಕೃತಿ ಕಾರ್ಯಕ್ರಮ ಆಯೋಜಿಸಲು ಮೈಸೂರು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲು ನಿರ್ಧರಿಸಲಾಯಿತು. ನಾಲ್ವಡಿ ಅವರ ಜೀವನ ಹಾಗೂ ಸಾಧನೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಕಿರುಹೊತ್ತಿಗೆಯನ್ನು ಮುದ್ರಿಸಿ ವಿತರಿಸಲು ನಿರ್ಣಯಿಸಲಾಯಿತು. ಕೃಷ್ಣರಾಜ ಒಡೆಯರ್ ಜಯಂತಿಗೆ ಸರ್ಕಾರವು 5 ಲಕ್ಷ ರೂ ಬಿಡುಗಡೆ ಮಾಡಿದ್ದು ಯಶಸ್ವಿಯಾಗಿ ಆಚರಿಸಲು ಸರ್ವರೂ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಕನ್ನಡ ಚಳವಳಿಗಾರರಾದ ತಾಯೂರು ವಿಠಲಮೂರ್ತಿ, ಎಂ.ಬಿ. ವಿಶ್ವನಾಥ್, ಪಾಲಹಳ್ಳಿ ರಾಮಕೃಷ್ಣ, ಅರಸು ಮಂಡಳಿ ಅಧ್ಯಕ್ಷ ಶ್ರೀಧರರಾಜ್ ಅರಸು, ಅರಸು ಮಹಾಸಭಾ ಅಧ್ಯಕ್ಷ ನಂದೀಶ್ ಅರಸು, ಅರಸು ಮಂಡಳಿ ಎಂಜಿಆರ್ ಅರಸು, ಇತಿಹಾಸ ತಜ್ಞ ಪಿ.ವಿ. ನಂಜರಾಜ ಅರಸು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಎ. ಗೋಪಾಲ, ಉಪವಿಭಾಗಾಧಿಕಾರಿ ಬಸವರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಕೆ. ರಾಮು ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. (ಕರ್ನಾಟಕ ವಾರ್ತೆ)