ಇಬ್ಬರು ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆ ತಡೆ
ನವದೆಹಲಿ, ಜು. 14 : ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಇಬ್ಬರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಾಕೇತ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.
2012ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಾಕೇತ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳಾದ ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಠಾಕೂರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಗಲ್ಲು ಶಿಕ್ಷೆಯನ್ನು ವಜಾಗೊಳಿಸಿ, ಪ್ರಕರಣದಿಂದ ಖುಲಾಸೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. [ನಿರ್ಭಯಾಳ ಬರ್ಬರ ಅತ್ಯಾಚಾರಕ್ಕೆ ಒಂದು ವರ್ಷ]
ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಅರ್ಜಿಯ ಸಮಗ್ರ ವಿಚಾರಣೆ ಮುಗಿಯುವವರೆಗೆ ಇಬ್ಬರು ಅಪರಾಧಿಗಳಿಗೆ ನೀಡಿದ್ದ ಗಲ್ಲುಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಅಪರಾಧಿಗಳಾದ ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಮರಣದಂಡನೆ ವಿಳಂಬವಾಗುವ ಸಾಧ್ಯತೆ ಇದೆ. [ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾ. ಯೋಗೇಶ್ ಹೇಳಿದ್ದೇನು?]
23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖೇಶ್, ಪವನ್, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಮತ್ತು ರಾಮ್ ಸಿಂಗ್ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿತ್ತು. ಇವರಲ್ಲಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇನ್ನುಳಿದ ನಾಲ್ಕು ಮಂದಿಯನ್ನು ಅಪರಾಧಿಗಳು ಎಂದು ತೀರ್ಮಾನಿಸಿದ ವಿಶೇಷ ನ್ಯಾಯಾಲಯ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ಅಪರಾಧಿಗಳಲ್ಲಿ ಒಬ್ಬನನ್ನು ವಿಶೇಷ ವಿಚಾರಣಾ ನ್ಯಾಯಾಲವು ಬಾಲಾಪರಾಧಿ ಎಂದು ತೀರ್ಮಾನಿಸಿ 2013ರ ಸೆಪ್ಟಂಬರ್ 10ರಂದು ಗರಿಷ್ಠ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು.